ಮಂಡ್ಯ: ‘ಹಿಜಾಬ್ ಕುರಿತಂತೆ ಅಲ್ಕೈದಾ ಸಂಘಟನೆ ಮುಖ್ಯಸ್ಥ ಆಯ್ಮಾನ್ ಅಲ್ ಝವಾಹಿರಿ ಹೇಳಿಕೆಯನ್ನು ಅಲ್ಪಸಂಖ್ಯಾತರು ವ್ಯಾಪಕವಾಗಿ ಖಂಡಿಸಬೇಕಾಗಿತ್ತು. ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರೇ ಇದನ್ನು ಖಂಡಿಸಿಲ್ಲ, ಅವರು ಅಲ್ಪಸಂಖ್ಯಾತರ ಓಲೈಕೆಯಲ್ಲಿ ತೊಡಗಿದ್ದಾರೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಗುರುವಾರ ಆರೋಪಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಅಲ್ಪಸಂಖ್ಯಾತರ ವೋಟಿಗಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಎರಡೂ ಪಕ್ಷಗಳು ಪೈಪೋಟಿ ನಡೆಸುತ್ತಿವೆ. ಸಿದ್ದರಾಮಯ್ಯ ಸಂಪೂರ್ಣವಾಗಿ ಗೊಂದಲದಲ್ಲಿ ಮುಳುಗಿದ್ದಾರೆ. ಏನು ಮಾತನಾಡಬೇಕು ಎಂಬುದೇ ಅವರಿಗೆ ತಿಳಿಯುತ್ತಿಲ್ಲ. ಸಮವಸ್ತ್ರ ಬೇಕೋ, ಬೇಡವೋ ಎಂಬ ಬಗ್ಗೆ ಅವರಿಗೆ ಸ್ಪಷ್ಟ ನಿಲುವುಗಳಿಲ್ಲ, ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ’ ಎಂದು ಆರೋಪಿಸಿದರು.
‘ಧರ್ಮಕ್ಕಿಂತ ಮಿಗಿಲಾಗಿ ನಾವು ಭಾರತೀಯರು. ದ್ವೇಷ, ವೈಮನಸ್ಸು ಬೆಳೆಸುವವರಿಗೆ ಪೂರಕವಾಗಿ ಅಲ್ಪಸಂಖ್ಯಾತರು ಇರಬಾರದು. ನಮ್ಮ ದೇಶ, ರಾಜ್ಯದ ಬಗ್ಗೆ ಮಾತನಾಡಿರುವ ಅಲ್ಕೈದಾ ಹೇಳಿಕೆಯನ್ನು ತೀವ್ರವಾಗಿ ಖಂಡಿಸಬೇಕು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.