ADVERTISEMENT

ಸಹಾಯಧನ ದುರ್ಬಳಕೆ ತಡೆಗೆ ಸೂಚನೆ: ಸಿ.ಸಿ. ಪಾಟೀಲ

​ಪ್ರಜಾವಾಣಿ ವಾರ್ತೆ
Published 9 ಜುಲೈ 2021, 22:16 IST
Last Updated 9 ಜುಲೈ 2021, 22:16 IST
ಸಿ.ಸಿ.‍ಪಾಟೀಲ
ಸಿ.ಸಿ.‍ಪಾಟೀಲ   

ಬೆಂಗಳೂರು: ಸಣ್ಣ ಕೈಗಾರಿಕೆಗಳನ್ನು ಉತ್ತೇಜಿಸಲು ಸರ್ಕಾರ ನೀಡುವ ಸಹಾಯಧನವನ್ನು ದುರ್ಬಳಕೆ ಮಾಡಿಕೊಳ್ಳಲು ಕೆಲವರು ಬೇನಾಮಿ ಅರ್ಜಿಗಳನ್ನು ಸಲ್ಲಿಸುತ್ತಿರುವ ದೂರುಗಳು ಬರುತ್ತಿವೆ. ಈ ಕುರಿತು ಪರಿಶೀಲಿಸಿ, ಕ್ರಮ ಜರುಗಿಸಬೇಕು ಎಂದು ಸಣ್ಣ ಕೈಗಾರಿಕಾ ಸಚಿವ ಸಿ.ಸಿ. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ವಿಕಾಸಸೌಧದಲ್ಲಿ ಶುಕ್ರವಾರ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ‘ಕೆಲವರು ಸಹಾಯಧನ ಪಡೆದ ಬಳಿಕ ಕೈಗಾರಿಕೆಗಳನ್ನೇ ನಡೆಸುವುದಿಲ್ಲ ಎಂಬ ಆರೋಪಗಳಿವೆ. ಸಹಾಯಧನ ದುರ್ಬಳಕೆ ತಡೆಯಲು ನಿರಂತರವಾಗಿ ತಪಾಸಣೆ ನಡೆಸಿ, ಕೈಗಾರಿಕಾಗಳು ಕಾರ್ಯನಿರ್ವಹಿಸುತ್ತಿರುವುದನ್ನು ಖಾತರಿಪಡಿಸಿಕೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

ಕೈಗಾರಿಕಾ ನೀತಿಯಡಿ ಕಳೆದ ವರ್ಷ ಅತಿಸಣ್ಣ, ಸಣ್ಣ ಮತ್ತು ಮಧ್ಯಮ (ಎಂಎಸ್‌ಎಂಇ) ಕೈಗಾರಿಕೆಗಳಿಗೆ ₹ 114 ಕೋಟಿ ಸಹಾಯಧನ ಬಿಡುಗಡೆ ಮಾಡಲಾಗಿದೆ. ಕೃಷಿ ನೀತಿಯಡಿ ₹ 165 ಕೋಟಿ ಬಿಡುಗಡೆ ಮಾಡಲಾಗಿದೆ. ಸಣ್ಣ ಕೈಗಾರಿಕೆಗಳ ಉತ್ಪನ್ನಗಳ ಮೇಲಿನ ರಿಯಾಯಿತಿ ಮತ್ತು ಪ್ರೋತ್ಸಾಹಧನಕ್ಕೆ ₹ 105.84 ಕೋಟಿ, ತೆಂಗಿನ ನಾರಿನ ವಲಯಕ್ಕೆ ತೆಂಗು ಭಾಗ್ಯ ಯೋಜನೆಯಡಿ ₹ 10 ಕೋಟಿ ಮತ್ತು ಎಂಎಸ್‌ಎಂಇ ಕ್ಷೇತ್ರಕ್ಕೆ ಪೂರಕವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ₹ 53.49 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದರು.

ADVERTISEMENT

ಬೆಂಗಳೂರಿನಲ್ಲಿ ಮಾತ್ರ ಕೈಗಾರಿಕೆಗಳ ಅಭಿವೃದ್ಧಿಯಾದರೆ ರಾಜ್ಯದ ಅಭಿವೃದ್ಧಿಗೆ ಪೂರಕವಾಗುವುದಿಲ್ಲ. ಎಲ್ಲ ಜಿಲ್ಲೆಗಳಲ್ಲೂ ಕೈಗಾರಿಕೆಗಳ ಸ್ಥಾಪನೆ ಆಗಬೇಕು. ಆ ನಿಟ್ಟಿನಲ್ಲಿ ಇಲಾಖೆಯ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಸಚಿವರು ಸೂಚಿಸಿದರು.

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ (ಎಂಎಸ್‌ಎಂಇ) ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ನಿರ್ದೇಶಕಿ (ಎಂಎಸ್‍ಎಂಇ) ವಿನೋತ್‌ ಪ್ರಿಯಾ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.