ಮೈಸೂರು: ‘ರಾಜ್ಯದಲ್ಲಿ ಕೋವಿಡ್ ಲಸಿಕೆಯೇ ಇಲ್ಲ ಎಂಬಂತಹ ಪರಿಸ್ಥಿತಿ ಒಮ್ಮೆಯೂ ನಿರ್ಮಾಣವಾಗಿಲ್ಲ. ರಾಜ್ಯದಲ್ಲಿ ಲಸಿಕೆ ಕೊರತೆಯಿಲ್ಲ’ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಈಗಲೂ ಪ್ರತಿನಿತ್ಯ 2 ರಿಂದ 3 ಲಕ್ಷ ಡೋಸ್ ಲಸಿಕೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಸದ್ಯ 5 ಲಕ್ಷ ಡೋಸ್ ಲಸಿಕೆ ದಾಸ್ತಾನು ಇದೆ. ಕೇಂದ್ರ ಆರೋಗ್ಯ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ರಾಜೇಶ್ ಭೂಷಣ್ ಜತೆ ಮಾತನಾಡಿದ್ದು, ಬುಧವಾರ ಇನ್ನಷ್ಟು ಲಸಿಕೆ ಕಳುಹಿಸಿಕೊಡುವುದಾಗಿ ಹೇಳಿದ್ದಾರೆ’ ಎಂದರು.
ಡಿಎಚ್ಒಗೆ ಸೂಚನೆ: ಇದಕ್ಕೂ ಮುನ್ನ ಕೋವಿಡ್ ಸ್ಥಿತಿಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಂಡ ಸಚಿವರು, ‘ಕೋವಿಡ್ ಲಸಿಕೆಗೆ ಸಂಬಂಧಿಸಿದಂತೆ ನೀವು ಯಾವುದೇ ಮಾಹಿತಿಯನ್ನು ಮಾಧ್ಯಮಗಳಿಗೆ ನೀಡಬೇಡಿ. ಎಲ್ಲವನ್ನೂ ಜಿಲ್ಲಾಧಿಕಾರಿ
ಅವರೇ ನೀಡುತ್ತಾರೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಚ್.ಪ್ರಸಾದ್ ಅವರಿಗೆ ಸೂಚಿಸಿದರು.
ಮೈಸೂರಿನಲ್ಲಿ ಸಾರ್ವಜನಿಕರಿಗೆ ಲಸಿಕೆ ನೀಡುವ ಪ್ರಕ್ರಿಯೆಯನ್ನು ನಿಲ್ಲಿಸಲಾಗಿದೆ ಎಂದು ಪ್ರಸಾದ್ ಅವರು ಸೋಮವಾರವಷ್ಟೇ ಪ್ರಕಟಣೆ ನೀಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.