ಬೆಂಗಳೂರು: ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಇಂದಿನಿಂದ 50 ದಿನಗಳ ಕಾಲ ವೈದ್ಯ ಸಿಬ್ಬಂದಿ ಮತ್ತು ಅಧಿಕಾರಿಗಳು ಕಾರ್ಯ ನಿರ್ವಹಿಸಲಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಕೋವಿಡ್ ನಿಯಂತ್ರಣ ಸಂಬಂಧ ವಿಧಾನಸೌಧದಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ‘ಈ ಸಮಯದಲ್ಲಿ ಲಸಿಕೆ ಮುಖ್ಯ. ಕೆಲ ದಿನಗಳ ಹಿಂದೆ ಒಂದೇ ದಿನ ಎರಡೂವರೆ ಲಕ್ಷ ಲಸಿಕೆ ನೀಡಲಾಗಿದೆ. ಇನ್ನು ಮುಂದೆ ಪ್ರತಿ ದಿನ ಮೂರು ಲಕ್ಷ ಮಂದಿಗೆ ಲಸಿಕೆ ನೀಡುವ ಗುರಿ ನಿಗದಿಪಡಿಸಲಾಗಿದೆ. 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ, 45 ವರ್ಷ ಮೇಲ್ಪಟ್ಟು ಅಸ್ವಸ್ಥತೆಯಿಂದ ಬಳಲುತ್ತಿರುವವರು ಲಸಿಕೆ ಹಾಕಿಸಿಕೊಳ್ಳಬೇಕು. ಈ ಮೂಲಕ 2 ನೇ ಅಲೆ ತಡೆಯಬೇಕು’ ಎಂದರು.
ಆಂಬ್ಯುಲೆನ್ಸ್ ಕೊರತೆ ಆಗಬಾರದು ಎಂಬ ಕಾರಣಕ್ಕೆ ಬೆಂಗಳೂರು ನಗರದಲ್ಲಿ 200 ಆಂಬ್ಯುಲೆನ್ಸ್ಗಳನ್ನು ನಿಯೋಜಿಸಲಾಗಿದೆ. ಎಲ್ಲ ಮಾಹಿತಿ ತಕ್ಷಣವೇ ಪಡೆಯಲು ರಿಯಲ್ ಟೈಮ್ ವ್ಯವಸ್ಥೆ ಮಾಡಲಾಗುತ್ತಿದೆ. ಗೃಹ ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿಯ ನೇಮಕವನ್ನು ತಾತ್ಕಾಲಿಕವಾಗಿ ಮಾಡಲು ತೀರ್ಮಾನಿಸಲಾಗಿದೆ ಎಂದರು.
ಖಾಸಗಿ ಆಸ್ಪತ್ರೆಗಳ ಜತೆ ಸಭೆ: ಇದೇ ವಾರ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಲಾಗುವುದು. ಎರಡನೇ ಅಲೆಯ ವೇಳೆ ರೋಗಿಗಳ ಸಂಖ್ಯೆ ಹೆಚ್ಚಾದರೆ ಖಾಸಗಿ ಆಸ್ಪತ್ರೆಗಳಲ್ಲಿ ವ್ಯವಸ್ಥೆ ಬೇಕಾಗುತ್ತದೆ ಎಂದರು.
ಮೊದಲ ಬಾರಿ ಕೊರೊನಾ ಬಂದಾಗ ಸರಿಯಾದ ಮಾಹಿತಿ, ಜ್ಞಾನ ಇರಲಿಲ್ಲ. ಅದನ್ನು ಯಶಸ್ವಿಯಾಗಿ ನಿಯಂತ್ರಣಕ್ಕೆ ತರಲಾಗಿದೆ. ಎರಡನೇ ಅಲೆ ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈಗ ನಮ್ಮ ಬಳಿ ಲಸಿಕೆಯೂ ಇದೆ. ಹಾಗಾಗಿ ಹೆಚ್ಚು ಜನರು ಲಸಿಕೆ ಹಾಕಿಸಿಕೊಳ್ಳಬೇಕು ಹಾಗೂ ತಪ್ಪದೇ ಸುರಕ್ಷತಾ ಕ್ರಮ ಪಾಲಿಸಬೇಕು ಎಂದು ಸುಧಾಕರ್ ಸಲಹೆ ನೀಡಿದರು.
ಕೋವಿಡ್ ಕೇರ್ ಸೆಂಟರ್: ಬೆಂಗಳೂರಿನಲ್ಲಿ ಒಟ್ಟು 1,000 ಹಾಸಿಗೆಯ ಕೋವಿಡ್ ಕೇರ್ ಸೆಂಟರ್ ನಿರ್ಮಿಸಿದ್ದು, ಸೋಮವಾರದಿಂದ ಕಾರ್ಯನಿರ್ವಹಿಸಲಿದೆ ಎಂದು ಸಚಿವರು ತಿಳಿಸಿದರು.
ಕೋವಿಡ್ ಲಸಿಕೆ ವ್ಯರ್ಥವಾಗುವುದಕ್ಕೆ ಸಂಬಂಧಿಸಿದಂತೆ ಸರಿಯಾದ ಮಾಹಿತಿ ನೀಡಲು ಸೂಚನೆ ನೀಡಲಾಗಿದೆ. ಪ್ರತಿ ದಿನ ವರದಿ ನೀಡಲು ಸೂಚಿಸಲಾಗಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.