ADVERTISEMENT

ಭ್ರೂಣ ಪತ್ತೆ: ತಪ್ಪಿತಸ್ಥರ ಪರವಾನಗಿ ರದ್ದು- ಸಚಿವ ಡಾ.ಕೆ.ಸುಧಾಕರ್

​ಪ್ರಜಾವಾಣಿ ವಾರ್ತೆ
Published 24 ಜನವರಿ 2022, 10:41 IST
Last Updated 24 ಜನವರಿ 2022, 10:41 IST
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್    

ಬೆಂಗಳೂರು: ರಾಜ್ಯದಲ್ಲಿ ಭ್ರೂಣ ಪತ್ತೆಗೆ ಅವಕಾಶವಿಲ್ಲ. ಭ್ರೂಣ ಪತ್ತೆ ಮಾಡುವುದು ಗೊತ್ತಾದರೆ ಕೃತ್ಯದಲ್ಲಿ ಭಾಗಿಯಾಗಿರುವ ತಜ್ಞರು, ತಾಂತ್ರಿಕ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ತಪ್ಪಿತಸ್ಥ ವೈದ್ಯರು ಹಾಗೂ ಪ್ರಯೋಗಾಲಯಗಳ ಪರವಾನಗಿಯನ್ನೂ ರದ್ದು ಮಾಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಸಿದ್ದಾರೆ.

ರಾಷ್ಟ್ರೀಯ ಹೆಣ್ಣುಮಕ್ಕಳ ದಿನದ ಅಂಗವಾಗಿ ಮಾತನಾಡಿದ ಅವರು, ಮಹಿಳೆಯರಿಗೆ ಸಮಾನತೆ ಕಲ್ಪಿಸುವುದು ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಆಶಯ. ಭ್ರೂಣ ಹತ್ಯೆ ವಿರುದ್ಧ ಜಾಗೃತಿ ಮೂಡಿಸಲಾಗುತ್ತಿದೆ. ಲಿಂಗ ಸಮಾನತೆಗಾಗಿಯೂ ಪ್ರಯತ್ನಿಸಲಾಗುತ್ತಿದೆ. 2001ರಿಂದ 2018ರ ಅವಧಿಯಲ್ಲಿ ಮಹಿಳೆಯರ ಲಿಂಗಾನು‍ಪಾತ ಹೆಚ್ಚಳವಾಗಿದೆ. ಇದು ಆಶಾದಾಯಕ ಬೆಳವಣಿಗೆ. ಮಹಿಳೆಯರ ಸಬಲೀಕರಣಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದರು.

ಕೋವಿಡ್‌ ಲಸಿಕೆಯ ಮೊದಲ ಡೋಸ್‌ ನೀಡುವಿಕೆಯಲ್ಲಿ ರಾಜ್ಯವು ಶೇ 100ರಷ್ಟು ಸಾಧನೆ ಮಾಡಿದೆ. ಎರಡನೇ ಡೋಸ್‌ ನೀಡುವಿಕೆಯಲ್ಲಿ ಶೇ 85.3ರಷ್ಟು ಸಾಧನೆಯಾಗಿದೆ. 15 ರಿಂದ 17 ವರ್ಷದೊಳಗಿನವರ ಪೈಕಿ ಶೇ 67.5 ಮಂದಿಗೆ ಮೊದಲ ಡೋಸ್‌ ನೀಡಲಾಗಿದೆ. ಈವರೆಗೆ 4,85,818 ಮಂದಿಗೆ ಬೂಸ್ಟರ್ ಡೋಸ್‌ ಕೊಡಲಾಗಿದೆ. ಲಸಿಕೀಕರಣದಲ್ಲಿ ರಾಜ್ಯವು ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದು ಹೇಳಿದರು.

ADVERTISEMENT

ಕೆಲ ಜಿಲ್ಲೆಗಳಲ್ಲಿ ಕೋವಿಡ್‌ ಪ್ರಕರಣಗಳು ಏರಿಕೆಯ ಹಾದಿಯಲ್ಲಿವೆ. ಮುಂದಿನ ಮೂರು ವಾರಗಳಲ್ಲಿ ಸೋಂಕಿತರ ಪ್ರಕರಣಗಳು ಕಡಿಮೆಯಾಗಲಿವೆ. ಸದ್ಯ ಆಸ್ಪತ್ರೆ ದಾಖಲಾತಿ ಪ್ರಮಾಣ ಕಡಿಮೆ ಇದೆ. ಜನವರಿಯಲ್ಲಿ ಒಟ್ಟು 32 ಲಕ್ಷ ಜನರಿಗೆ ಕೋವಿಡ್‌ ಪರೀಕ್ಷೆ ಮಾಡಲಾಗಿದೆ. ಈವರೆಗೆ ರಾಜ್ಯದಲ್ಲಿ ₹6 ಕೋಟಿ ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.