ADVERTISEMENT

ಗ್ಯಾರಂಟಿ ಯೋಜನೆಗಳ ವಿಚಾರವಾಗಿ ಅಂತೆ-ಕಂತೆಗಳಿಗೆ ಕಿವಿಗೊಡಬೇಡಿ: ಸಚಿವೆ ಹೆಬ್ಬಾಳಕರ

​ಪ್ರಜಾವಾಣಿ ವಾರ್ತೆ
Published 6 ಜೂನ್ 2023, 10:22 IST
Last Updated 6 ಜೂನ್ 2023, 10:22 IST
ಲಕ್ಷ್ಮೀ ಹೆಬ್ಬಾಳಕರ
ಲಕ್ಷ್ಮೀ ಹೆಬ್ಬಾಳಕರ   

ಬೆಳಗಾವಿ: 'ಭರವಸೆ ನೀಡಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲಾಗುವುದು. ಅಂತೆ-ಕಂತೆಗಳಿಗೆ ಜನ ಕಿವಿಗೊಡಬಾರದು' ಎಂದು ಮಹಿಳಾ ಮತ್ತು ಮಕ್ಕಳ ಹಾಗೂ ಹಿರಿಯ ನಾಗರಿಕರು, ವಿಕಲಚೇತನರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ನಗರದಲ್ಲಿ ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 'ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಅತೀ ಶೀಘ್ರದಲ್ಲಿ ಜಾರಿಗೊಳಿಸಲಾಗುತ್ತದೆ. ಬೆಲೆ ಏರಿಕೆಯಿಂದ ತತ್ತರಿಸಿದ ಜನರಿಗೆ ನೀಡಿದ ಭರವಸೆಗಳನ್ನು ಹಂತ ಹಂತವಾಗಿ ಈಡೇರಿಸುತ್ತಿದ್ದೇವೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಸರ್ಕಾರ ನಿಮ್ಮೊಂದಿಗಿದೆ' ಎಂದರು.

'ಬಿಜೆಪಿಯವರು ನಡೆಸುತ್ತಿರುವ ಪ್ರತಿಭಟನೆಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಅವರ ಅಧಿಕಾರದ ಅವಧಿಯಲ್ಲಿ ರಾಜ್ಯದ ಜನರಿಗೆ ನೀಡಿದ ಭರವಸೆಗಳಲ್ಲಿ ಎಷ್ಟು ಈಡೇರಿಸಿದ್ದಾರೆ ಎಂದು ಜನರಿಗೆ ಗೊತ್ತಿದೆ. ಅದಕ್ಕಾಗಿಯೇ ಜನರು ಅವರಿಗೆ ಪಾಠ ಕಲಿಸಿದ್ದಾರೆ ಎಂದು ಅವರು ಹೇಳಿದರು.

ADVERTISEMENT

ಗೃಹ ಲಕ್ಷ್ಮೀ ಯೋಜನೆಯ ಅರ್ಜಿ ಕರೆಯಲು ಅಧಿಕಾರಿಗಳ ಜೊತೆಗೆ ಈಗಾಗಲೇ ಚರ್ಚೆ ನಡೆಸಿದ್ದೇವೆ. ಮನೆಯ ಯಜಮಾನಿಯನ್ನು ಕುಟುಂಬದವರೇ ಗುರುತಿಸಲಿದ್ದಾರೆ. ಇದರಲ್ಲಿ ಯಾವುದೇ ಗೊಂದಲವಿಲ್ಲದೆ ಸರಳವಾಗಿ ಯೋಜನೆ ಜಾರಿಯಾಗಲಿದೆ ಎನ್ನುವ ವಿಶ್ವಾಸವಿದೆ' ಎಂದು ಹೆಬ್ಬಾಳಕರ ಹೇಳಿದರು.

'ಗೃಹಜ್ಯೋತಿ' ಯೋಜನೆಯಿಂದ ಬಾಡಿಗೆದಾರರು ವಂಚಿತರಾಗುವ ಕುರಿತು ಪ್ರಶ್ನೆಗೆ ಉತ್ತರಿಸಿದ ಅವರು, 'ಈಗಾಗಲೇ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಇಂಧನ ಸಚಿವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಯೋಜನೆಯಿಂದ ಯಾರೂ ಹೊರಗುಳಿಯುವುದಿಲ್ಲ' ಎಂದು ಭರವಸೆ ನೀಡಿದರು.

'ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ ಕುರಿತು ಸರ್ಕಾರ ಚರ್ಚಿಸಿ ನಿರ್ಧಾರ ಕೈಗೊಳ್ಳಲಿದೆ. ಪ್ರಣಾಳಿಕೆಯಲ್ಲೂ ಈ ವಿಷಯ ಹಾಕಲಾಗಿತ್ತು. ಆ ಬಗ್ಗೆ ಸರಿಯಾದ ನಿರ್ಧಾರಕ್ಕೆ ಸರಕಾರ ಬರಲಿದೆ. ಚುನಾವಣೆ ಸಂದರ್ಭದಲ್ಲಿ ಬೆಲೆ ಏರಿಕೆಯಿಂದ ತತ್ತರಿಸಿದ ಜನರಿಗೆ ಭರವಸೆಯ ಆಶಾಕಿರಣ ಮೂಡಿಸಿದ್ದು ಕಾಂಗ್ರೆಸ್ ಪಕ್ಷ. ಕೊಟ್ಟ ಭರವಸೆಯನ್ನು ಈಡೇರಿಸಲಾಗುವುದು. ಅಲ್ಲಿಯವರೆಗೆ ಸ್ವಲ್ಪ ತಾಳ್ಮೆ ಬೇಕು. ಯಾವುದೇ ಆತಂಕ ಬೇಡ' ಎಂದು ಅವರು ತಿಳಿಸಿದರು.

ಬೆಳಗಾವಿ ಜಿಲ್ಲೆ ವಿಭಜನೆಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 'ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲಾ ವಿಭಜನೆ ಆಗಬೇಕು. ಜಿಲ್ಲಾ ವಿಭಜನೆ ಕೂಗೂ ಮೊದಲಿನಿಂದಲೂ ಇದೆ. ನಮ್ಮ ಸರ್ಕಾರ ಅದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಿದೆ' ಎಂದರು.

'ನಾನು ಮಹಿಳೆಯಾಗಿ ಹೇಳುತ್ತೇನೆ; ಗೋಹತ್ಯೆ ಅಷ್ಟೇ ಅಲ್ಲ, ಯಾವ ಪ್ರಾಣಿಯ ಹತ್ಯೆಯನ್ನು ನಾನು ಸಹಿಸುವುದಿಲ್ಲ' ಎಂದೂ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.