ADVERTISEMENT

ಚಿತ್ರದುರ್ಗ: ಸಂಪುಟದಿಂದ ಸಚಿವ ಪ್ರಭು ಚವಾಣ್‌ ಕೈಬಿಡಲು ಒತ್ತಾಯ

ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿದ ಆರೋಪ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2020, 12:32 IST
Last Updated 23 ಸೆಪ್ಟೆಂಬರ್ 2020, 12:32 IST
ಪ್ರಭು ಚವಾಣ್‌
ಪ್ರಭು ಚವಾಣ್‌   

ಚಿತ್ರದುರ್ಗ: ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಪಶುಸಂಗೋಪನಾ ಸಚಿವ ಪ್ರಭು ಚವಾಣ್‌ ಅವರನ್ನು ಸಂಪುಟದಿಂದ ಕೈಬಿಟ್ಟು, ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಮಾಜಿ ಸಚಿವ ಎಚ್‌.ಆಂಜನೇಯ ಒತ್ತಾಯಿಸಿದರು.

‘ಮೂಲತಃ ಮಹಾರಾಷ್ಟ್ರದ ಪ್ರಭು ಚವಾಣ್‌ ಕರ್ನಾಟಕಕ್ಕೆ ವಲಸೆ ಬಂದು ಶಾಸಕರಾಗಿದ್ದಾರೆ. ಲಂಬಾಣಿ ಸಮುದಾಯ ಮಹಾರಾಷ್ಟ್ರದಲ್ಲಿ ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿದೆ. ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸಲು ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಜಾತಿ ಪ್ರಮಾಣ ಪತ್ರದ ಮರುಪರಿಶೀಲನೆಗೆ ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿದೆ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

‘ಜಾತಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಕೆ ಮಾಡುವಂತೆ ನೋಟಿಸ್ ಜಾರಿ ಮಾಡಿದ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ. ಹಣ, ಅಧಿಕಾರ ಹಾಗೂ ತೋಳ್ಬಲದಿಂದ ಮೀಸಲಾತಿ ಕಬಳಿಸುವ ಹುನ್ನಾರ ನಡೆಯುತ್ತಿದೆ. ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಶಾಸನಸಭೆಗೆ ಆಯ್ಕೆಯಾಗುತ್ತಿರುವುದು ವಿಪರ್ಯಾಸ’ ಎಂದು ಬೇಸರ ವ್ಯಕ್ತಪಡಿಸಿದರು.

ADVERTISEMENT

‘ಪ್ರಭು ಚವಾಣ್‌ ಅವರು ಮಹಾರಾಷ್ಟ್ರದಲ್ಲಿ ಶಿಕ್ಷಣ ಪಡೆದಿದ್ದಾರೆ. ಪಡಿತರ ಚೀಟಿಯನ್ನು ಹೊಂದಿದ್ದಾರೆ. ಇದಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಜಿಲ್ಲಾಡಳಿತಕ್ಕೆ ಒದಗಿಸಲಾಗಿದೆ. ಸಚಿವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಕಾಲಾಹರಣ ಮಾಡಲಾಗುತ್ತಿದೆ. ಒಳಮೀಸಲಾತಿ ಸೌಲಭ್ಯ ಕಲ್ಪಿಸಿದರೆ ಇಂತಹ ವಂಚನೆಗೆ ಕಡಿವಾಣ ಹಾಕಲು ಸಾಧ್ಯವಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.