
ಕಲಬುರಗಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ 9 ಸಾವಿರ ಸಿಬ್ಬಂದಿಯನ್ನು ಶೀಘ್ರವೇ ನೇಮಕ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ನಗರದಲ್ಲಿ ನೂತನ ಸ್ಯಾಟಲೈಟ್ ಬಸ್ ನಿಲ್ದಾಣವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಅವರು, ‘ರಾಜ್ಯದ ನಾಲ್ಕು ಸಾರಿಗೆ ನಿಗಮಗಳಲ್ಲಿ 13,800ಕ್ಕೂ ಅಧಿಕ ಸಿಬ್ಬಂದಿ ನಿವೃತ್ತಿಯಾಗಿದ್ದರಿಂದ ಆ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮತಿ ನೀಡಿದ್ದಾರೆ. ಈಗಾಗಲೇ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯಾಪ್ತಿಯಲ್ಲಿ 1,619 ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕಾತಿ ಅಂತಿಮ ಹಂತದಲ್ಲಿದೆ’ ಎಂದರು.
‘ಶಕ್ತಿ ಯೋಜನೆಯನ್ನು ವಿರೋಧ ಪಕ್ಷಗಳು ಟೀಕಿಸಿದ್ದವು. ನಮ್ಮ ನಿರೀಕ್ಷೆ ಮೀರಿ ಮಹಿಳೆಯರು ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಉಚಿತವಾಗಿ ಸಂಚರಿಸುತ್ತಿದ್ದು, ಉತ್ತಮ ಸ್ಪಂದನೆ ಸಿಕ್ಕಿದೆ. ಯೋಜನೆ ಜಾರಿಗೆ ಬರುವುದಕ್ಕೆ ಮುನ್ನ ನಿತ್ಯ 84 ಲಕ್ಷ ಜನ ಬಸ್ಗಳಲ್ಲಿ ಸಂಚರಿಸುತ್ತಿದ್ದರು. ಈಗ ನಿತ್ಯ 1.10 ಕೋಟಿ ಜನ ಪ್ರಯಾಣಿಸುತ್ತಿದ್ದಾರೆ. ಹೀಗಾಗಿ, ಪ್ರಯಾಣಿಕರ ಬೇಡಿಕೆಯನ್ನು ನೀಗಿಸಲು ಹೊಸದಾಗಿ 5,800 ಬಸ್ಗಳನ್ನು ಖರೀದಿಸಲು ಆದೇಶ ನೀಡಲಾಗಿದೆ. ಮಾರ್ಚ್ ವೇಳೆಗೆ ಹೊಸ ಬಸ್ಗಳು ಸೇರ್ಪಡೆಯಾಗಲಿವೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.