ADVERTISEMENT

ಡಿಸಿಎಂ ಹುದ್ದೆ ಕೇಳುವುದಿಲ್ಲ: ಸಚಿವ ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2020, 15:13 IST
Last Updated 5 ಫೆಬ್ರುವರಿ 2020, 15:13 IST
ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರ ಮನೆಗೆ ಭೇಟಿ ನೀಡಿ ಪುತ್ರಿಯ ವಿವಾಹದ ಆಹ್ವಾನ ಪತ್ರಿಕೆ ನೀಡಿದ ಸಚಿವ ಬಿ.ಶ್ರೀರಾಮುಲು
ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರ ಮನೆಗೆ ಭೇಟಿ ನೀಡಿ ಪುತ್ರಿಯ ವಿವಾಹದ ಆಹ್ವಾನ ಪತ್ರಿಕೆ ನೀಡಿದ ಸಚಿವ ಬಿ.ಶ್ರೀರಾಮುಲು   

ತುಮಕೂರು: ‘ನಾನು ಮುಂದೆ ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆ ಕೇಳುವುದಕ್ಕೆ ಹೋಗುವುದಿಲ್ಲ. ಪಕ್ಷಕ್ಕೆ ಮುಜುಗರ ಮಾಡುವುದಿಲ್ಲ’ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಯಾವ ನಿರ್ಧಾರವನ್ನು ಕೈಗೊಳ್ಳುತ್ತಾರೋ ಅದಕ್ಕೆ ಬದ್ಧ. ಪಕ್ಷ ಮತ್ತು ಸಿದ್ಧಾಂತದ ಮೇಲೆ ರಾಜಕಾರಣ ಮಾಡಬೇಕಾಗುತ್ತದೆ. ರಾಮುಲು ಅವರಿಗೆ ಡಿಸಿಎಂ ಹುದ್ದೆ ಬೇಕು ಎನ್ನುವುದರಿಂದ ಪಕ್ಷಕ್ಕೆ ಮುಜುಗರ ಆಗುತ್ತದೆ. ಈ ವಿಚಾರದಲ್ಲಿ ಯಾರ ಮೇಲೂ ಒತ್ತಡ ತರಲು ಸಾಧ್ಯವಿಲ್ಲ’ ಎಂದು ನುಡಿದರು.

‘ನಮ್ಮ ನಾಯಕರಾದ ಯಡಿಯೂರಪ್ಪ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಅಮಿತ್ ಶಾ ಅವರು ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಚರ್ಚಿಸಿದ್ದಾರೆ. ಗುರುವಾರ ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳಲಿದೆ. ಎಲ್ಲ ಶಾಸಕರು ಒಗ್ಗಟ್ಟಿನಿಂದ ಇದ್ದೇವೆ. ಪಕ್ಷದ ತೀರ್ಮಾನಕ್ಕೆ ಬದ್ಧ’ ಎಂದರು.

ADVERTISEMENT

ರಾಜ್ಯ ಮತ್ತು ಕೇಂದ್ರ ಸರ್ಕಾರದ 30 ಆರೋಗ್ಯ ಯೋಜನೆಗಳ ಬಗ್ಗೆ ಹಳ್ಳಿ ಹಳ್ಳಿಗಳಲ್ಲಿ ಪ್ರಚಾರ ಕೈಗೊಳ್ಳಲು ಎಲ್‌ಇಡಿ ವಾಹನಗಳಿಗೆ ಬೆಂಗಳೂರಿನಲ್ಲಿ ಚಾಲನೆ ನೀಡಲಾಗಿದೆ. 15 ವಾಹನಗಳು ನಿತ್ಯ ನಾಲ್ಕು ಹಳ್ಳಿಗಳಿಗೆ ತೆರಳಿ ಪ್ರಚಾರಕೈಗೊಳ್ಳಲಿವೆ ಎಂದು ಹೇಳಿದರು.

ಶಾಸಕರಾದ ಬಿ.ಜಿ.ಜ್ಯೋತಿ ಗಣೇಶ್, ಮಸಾಲ ಜಯರಾಮ್ ಹಾಗೂ ಪಕ್ಷದ ಮುಖಂಡರು ಇದ್ದರು.

ಮಗಳ ಮದುವೆಗೆ ಆಹ್ವಾನ

ತಮ್ಮ ಪುತ್ರಿಯ ವಿವಾಹದಲ್ಲಿ ಪಾಲ್ಗೊಳ್ಳುವಂತೆ ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಅವರಿಗೆ ಶ್ರೀರಾಮುಲು ವಿವಾಹದ ಆಮಂತ್ರಣ ಪತ್ರಿಕೆ ನೀಡಿದರು. ನಂತರ ಅಲ್ಲಿಂದ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಅವರ ನಿವಾಸಕ್ಕೆ ತೆರಳಿ ಅಲ್ಲಿ ಊಟ ಮಾಡಿದರು. ವಿವಾಹದ ಆಹ್ವಾನ ಪತ್ರಿಕೆ ನೀಡಿದರು. ನಂತರ ಐಬಿಗೆ ತೆರಳಿ ವಾಲ್ಮೀಕಿ ಸಮುದಾಯದ ಮುಖಂಡರನ್ನು ವಿವಾಹಕ್ಕೆ ಆಹ್ವಾನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.