ADVERTISEMENT

ಡಾ.ನಾಗೇಂದ್ರ ಆತ್ಮಹತ್ಯೆ: ಕುಟುಂಬಸ್ಥರಿಗೆ ನೆರವು ನೀಡುವುದಾಗಿ ಸುಧಾಕರ್‌ ಭರವಸೆ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2020, 13:46 IST
Last Updated 20 ಆಗಸ್ಟ್ 2020, 13:46 IST
ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್
ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್    

ಬೆಂಗಳೂರು: ನಂಜನಗೂಡು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕುಟುಂಬಸ್ಥರಿಗೆ ಸೂಕ್ತ ನೆರವು ನೀಡುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ‘ನಾಗೇಂದ್ರ ಅವರ ಸಾವಿನಲ್ಲಿ ಗೊಂದಲ ಸೃಷ್ಟಿಮಾಡುವುದು ಅಮಾನವೀಯವಾಗುತ್ತದೆ. ವೈದ್ಯಕೀಯ ಸಂಘದ ಎಲ್ಲಾ ಆತ್ಮೀಯರಿಗೆ ಮನವಿ ಮಾಡುವುದೇನೆಂದರೆ ನಾಗೇಂದ್ರ ಅವರ ಅಂತ್ಯ ಸಂಸ್ಕಾರವನ್ನು ನೆರವೇರಿಸಲು ಆದ್ಯತೆ ಕೊಡಿ. ಅವರ ಕುಟುಂಬ ವರ್ಗದವರಿಗೆ ಮುಖ್ಯಮಂತ್ರಿ ಬಿಎಸ್‌ವೈ ಜೊತೆ ಚರ್ಚೆಸಿ ನ್ಯಾಯ ಕೊಡಿಸುತ್ತೇವೆ’ ಎಂದು ಭರವಸೆ ನೀಡಿದ್ದಾರೆ.

‘ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು ಅವರ ಪ್ರಾಣವನ್ನು ಹಿಂದಿರುಗಿ ತರಲು ಸಾಧ್ಯವಿಲ್ಲವೆಂದು ಗೊತ್ತಿದೆ. ಆದರೆ ಅವರ ಕುಟುಂಬದ ಸದಸ್ಯರಿಗೆ ಶಾಶ್ವತವಾದ ಪರಿಹಾರವನ್ನು ಸರ್ಕಾರ ಖಂಡಿತವಾಗಿಯೂ ಒದಗಿಸುತ್ತದೆ. ಎಲ್ಲಾ ಕೋವಿಡ್‌ ಯೋಧರ ಜೊತೆ ಸರ್ಕಾರ ಇದೆ ಎಂದು ಹೇಳಲು ಇಚ್ಛಿಸುತ್ತೇನೆ’ ಎಂದು ಹೇಳಿದ್ದಾರೆ.

ADVERTISEMENT

‘ಯಾರೂ ಕೂಡಾ ನಾಗೇಂದ್ರ ಅವರ ಸಾವನ್ನು ಅನ್ಯ ಕಾರಣಗಳಿಗೆ ದುರ್ಬಳಕೆ ಮಾಡಬಾರದು ಎಂದು ಕಳಕಳಿಯ ಮನವಿ ಮಾಡುತ್ತಿದ್ದೇನೆ. ಈಗಾಗಲೇ ವೈದ್ಯಾಧಿಕಾರಿಗಳ ಸಂಘದ ಪದಾಧಿಕಾರಿಗಳ ಜೊತೆ ಸಭೆ ಕರೆದಿದ್ದೇನೆ. ಕೋವಿಡ್‌ ಯೋಧರ ನೆರವಿಗೆ ನಮ್ಮ ಸರ್ಕಾರ ಜೊತೆಗಿದೆ. ಇನ್ಮುಂದೆ ಇಂತಹ ಘಟನೆಗಳು ನಡೆಯದಂತೆ ಮತ್ತಷ್ಟು ಸೂಕ್ತ ಕ್ರಮಗಳು ಕೈಗೊಳ್ಳಲಾಗುವುದು’ ಎಂದಿದ್ದಾರೆ.

'ಕೋವಿಡ್‌ ನಿಯಂತ್ರಿಸುವಲ್ಲಿ ಬಿಡುವಿಲ್ಲದೇ ಹಗಲಿರುಳು ಶ್ರಮಿಸುತ್ತಿರುವ ನಮ್ಮ ಎಲ್ಲಾ ಕೋವಿಡ್‌ ವಾರಿಯರ್ಸ್‌ಗಳಿಗೆ ನಾನು ಈ ಮೂಲಕ ತಿಳಿಸುವುದೇನಂದರೆ ಅಧಿಕ ಕೆಲಸದಿಂದ ನೀವು ಒತ್ತಡ, ಮಾನಸೀಕ ಖಿನ್ನತೆಗೆ ಒಳಗಾಗುತ್ತಿರುವುದು ನಮ್ಮ ಸರ್ಕಾರದ ಗಮನಕ್ಕೆ ಬಂದಿದೆ’ ಎಂದು ಹೇಳಿದ್ದಾರೆ.

‘ರಾಜ್ಯದ ಎಲ್ಲಾ ಭಾಗದ ವೈದ್ಯರುಗಳಿಗೆ, ಕೊರೊನಾ ಯೋಧರಿಗೆ ನೈತಿಕ ಸ್ಫೂರ್ತಿ ಹಾಗೂ ಮುಂದಿನ ದಿನಗಳಲ್ಲಿ ನಿಮ್ಮ ಒತ್ತಡಗಳನ್ನು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಬಿಡುವಿಲ್ಲದೇ ಕೆಲಸ ಮಾಡುತ್ತಿರುವ ನಿಮಗೆ ರಜೆ, ಒತ್ತಡ ಸಡಿಲ ಮಾಡಲು ಎಲ್ಲಾ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.