ADVERTISEMENT

ಬಿಸಿಯೂಟಕ್ಕೆ ಕೇಂದ್ರದ ಅನುಮತಿ ಸಿಕ್ಕಿಲ್ಲ: ಸಚಿವ ಸುರೇಶ್ ಕುಮಾರ್

ಶಿಕ್ಷಕರ ಸಮಸ್ಯೆ ಬಗೆಹರಿಸಲು ಆ್ಯಪ್

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2021, 13:48 IST
Last Updated 27 ಫೆಬ್ರುವರಿ 2021, 13:48 IST
ಸಚಿವ ಸುರೇಶ್‌ ಕುಮಾರ್
ಸಚಿವ ಸುರೇಶ್‌ ಕುಮಾರ್   

ಮಂಗಳೂರು: ‘ಬಿಸಿಯೂಟ ಆರಂಭಕ್ಕೆ ಶಿಕ್ಷಣ ಇಲಾಖೆ ಸಿದ್ಧವಾಗಿದೆ. ಆದರೆ, ಕೇಂದ್ರ ಸರ್ಕಾರದಿಂದ ಸಮ್ಮತಿ ದೊರೆತಿಲ್ಲ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್ ಹೇಳಿದರು.

ನಗರದ ಪುರಭವನದಲ್ಲಿ ಶನಿವಾರ ಮುಖ್ಯ ಶಿಕ್ಷಕರೊಂದಿಗೆ ಸಚಿವರ ಸಂವಾದ ಕಾರ್ಯಕ್ರಮಲ್ಲಿ ಅವರು ಮಾತನಾಡಿದರು.

‘1ನೇ ತರಗತಿಯಿಂದಲೇ ಶಾಲೆ ಆರಂಭಿಸಲು ಇಲಾಖೆಯು ಸಿದ್ಧತೆ ನಡೆಸಿದೆ. ಆದರೆ, ಆರೋಗ್ಯ ಇಲಾಖೆಯ ತಾಂತ್ರಿಕ ಸಲಹಾ ಸಮಿತಿಯ ಸಮ್ಮತಿ ದೊರೆತಿಲ್ಲ’ ಎಂದ ಅವರು, ‘ಇನ್ನೆರಡು ದಿನಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗುವುದು’ ಎಂದು ತಿಳಿಸಿದರು.

ADVERTISEMENT

ಆ್ಯಪ್‌: ‘ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕಾಗಿ ಇಲಾಖೆಯು ಆ್ಯಪ್‌ ಹೊರತರಲಿದೆ. ಬಳಿಕ ಶಿಕ್ಷಕರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಉಪ ನಿರ್ದೇಶಕರ ಕಚೇರಿಗಳಿಗೆ ಅಲೆದಾಡಬೇಕಾಗಿಲ್ಲ’ ಎಂದರು.

‘ಕೆಲವು ಅಧಿಕಾರಿಗಳ ಕಚೇರಿಗಳಲ್ಲಿ ಕಡತಗಳು ವಿನಾಕಾರಣ ಬಾಕಿ ಉಳಿದಿರುವ ಬಗ್ಗೆ ದೂರುಗಳಿದ್ದು, ಪರಿಶೀಲನೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳನ್ನು ಶಿಕ್ಷೆಗೆ ಗುರಿ ಮಾಡಲಾಗುವುದು. ಶೀಘ್ರವೇ ಬೆಳಗಾವಿಯಿಂದ ಆರಂಭಿಸಿ, ವಿಭಾಗೀಯ ಮಟ್ಟದಲ್ಲಿ ಕಡತ ವಿಲೇವಾರಿ ಅದಾಲತ್‌ ನಡೆಸುತ್ತೇವೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.