ಜಿ. ಪರಮೇಶ್ವರ
ಬೆಂಗಳೂರು: ‘ಶಾಸಕರಿಗೆ ₹80 ಲಕ್ಷ ಕೊಟ್ಟಿರುವುದಾಗಿ ಆನೇಕಲ್ ಇನ್ಸ್ಪೆಕ್ಟರ್ ಹೇಳಿಕೆ ನೀಡಿದ್ದಾರೆ. ಈ ವಿಚಾರವಾಗಿ ಎರಡು ದಿನಗಳಲ್ಲಿ ವರದಿ ನೀಡುವಂತೆ ಸೂಚಿಸಿದ್ದೇನೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಶುಕ್ರವಾರ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.
‘ಶಾಸಕರ ಮೇಲೆ ಆರೋಪ ಮಾಡುತ್ತಾನೆ ಎಂದಾದರೆ, ಈವರೆಗೂ ಯಾಕೆ ಕ್ರಮ ತೆಗೆದುಕೊಂಡಿಲ್ಲ. ವರದಿ ಕೊಟ್ಟರೆ ತಕ್ಷಣ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದರು.
ಡ್ರಗ್ಸ್ ದಂಧೆಯ ಜತೆ ನಂಟು ಹೊಂದಿದ್ದ ಇನ್ಸ್ಪೆಕ್ಟರ್ ಸೇರಿ 11 ಮಂದಿ ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಅವರ ವಿರುದ್ಧ ತಕ್ಷಣವೇ ಇಲಾಖಾ ವಿಚಾರಣೆ ನಡೆಸಿ, ಸರ್ಕಾರಕ್ಕೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.
ಸಿಕ್ಕಿಬಿದ್ದ ಅಧಿಕಾರಿಗಳನ್ನು ವಜಾಗೊಳಿಸುವುದರಿಂದ ಹಿಡಿದು ಏನೆಲ್ಲ ಶಿಕ್ಷೆ ಕೊಡಬೇಕು ಎಂಬುದರ ಬಗ್ಗೆ ಇಲಾಖಾ ವಿಚಾರಣೆಯಲ್ಲಿ ಬರುತ್ತದೆ. ಆದಾದ ಬಳಿಕ ಸರ್ಕಾರ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು.
‘ಎಲ್ಲೆಲ್ಲಿ ಡ್ರಗ್ಸ್ ದಂಧೆ ನಡೆಯುತ್ತದೆ, ಆ ಠಾಣಾ ವ್ಯಾಪ್ತಿಯ ಅಧಿಕಾರಿ ಮತ್ತು ಸಿಬ್ಬಂದಿಯೇ ಹೊಣೆಗಾರರು ಎಂದು ಈ ಹಿಂದೆಯೇ ಹೇಳಲಾಗಿತ್ತು. ಈವರೆಗೆ ಎಷ್ಟು ನೋಟಿಸ್ ನೀಡಿದ್ದೀರಿ? ಎಷ್ಟು ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಸರ್ಕಾರಕ್ಕೆ ವರದಿ ಕೊಟ್ಟಿದ್ದೀರಿ ಎಂದು ಹಿರಿಯ ಅಧಿಕಾರಿಗಳನ್ನು ಪ್ರಶ್ನಿಸಿದ್ದೇನೆ’ ಎಂದರು.
‘ಡ್ರಗ್ಸ್ ಮಾಫಿಯಾ ಮತ್ತು ಇತರ ಅಕ್ರಮ ದಂಧೆಯಲ್ಲಿ ಪೊಲೀಸರು ಶಾಮೀಲಾಗಿರುವುದು ಕಂಡುಬಂದರೆ ಇನ್ನು ಎಚ್ಚರಿಕೆ ಕೊಡುವುದಿಲ್ಲ. ನೇರ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.