ಹುಬ್ಬಳ್ಳಿ: ರೈತರ ಸಾಲ ಮನ್ನಾ ಹೆಸರಲ್ಲಿ ಅಧಿಕಾರಿಗಳು ಅವ್ಯವಹಾರ ನಡೆಸುತ್ತಿದ್ದಾರೆ ಎಂದು ಶಾಸಕ ಜಗದೀಶ ಶೆಟ್ಟರ್ ಆರೋಪಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಮಿಷನ್ ಕೊಡುವ ರೈತರಿಗಷ್ಟೇ ಅಧಿಕಾರಿಗಳು ಸಾಲ ಮನ್ನಾ ಮಾಡುತ್ತಿದ್ದಾರೆ. ಕಮಿಷನ್ ಕೊಡದ ರೈತರಿಗೆ ಆ ದಾಖಲೆ ಬೇಕು, ಈ ದಾಖಲೆ ಬೇಕು ಎಂದು ಸತಾಯಿಸುವ ಮೂಲಕ ಸಾಲಮನ್ನಾ ಯೋಜನೆಯಿಂದಲೇ ಕೈಬಿಡುತ್ತಿದ್ದಾರೆ ಎಂದು ದೂರಿದರು.
ಈಗಾಗಲೇ 13,600 ರೈತರ ಹೆಸರನ್ನು ಸಾಲಮನ್ನಾ ಯೋಜನೆಯಿಂದ ಅಧಿಕಾರಿಗಳು ಕೈಬಿಟ್ಟಿದ್ದಾರೆ. ಸರ್ಕಾರಕ್ಕೆ ಕೆಟ್ಟ ಹೆಸರು ತರುತ್ತಿರುವ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸರ್ಕಾರ ಶಿಸ್ತು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಅಭ್ಯಂತರವಿಲ್ಲ:
ಜಿಂದಾಲ್ಗೆ 3667 ಎಕರೆ ಭೂಮಿಯನ್ನು ಕಡಿಮೆ ದರಕ್ಕೆ ಮಾರಾಟ ಮಾಡುವ ಬದಲು ಲೀಸ್ ಮುಂದುವರಿಸುವುದಕ್ಕೆ ಅಭ್ಯಂತರ ಇಲ್ಲ ಎಂದು ಶೆಟ್ಟರ್ ಹೇಳಿದರು.
ಭಿನ್ನಮತ ಉಲ್ಭಣ:
ಸಚಿವ ಸಂಪುಣ ವಿಸ್ತರಣೆಯಿಂದ ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಭಿನ್ನಮತ ಹೆಚ್ಚಾಗಲಿದೆಯೇ ಹೊರತು, ಶಾಂತವಾಗಲ್ಲ. ಎರಡೂ ಪಕ್ಷದಲ್ಲಿ ಡಜನ್ಗಟ್ಟಲೇ ಸಚಿವ ಸ್ಥಾನದ ಆಕಾಂಕ್ಷಿಗಳಿರುವುದರಿಂದ ಸಚಿವ ಸಂಪುಟ ವಿಸ್ತರಣೆಯು ಜೇನುಗೂಡಿಗೆ ಕೈಹಾಕಿದಂತೆ ಎಂದು ಅಭಿಪ್ರಾಯಪಟ್ಟರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.