ADVERTISEMENT

ಹೈಕೋರ್ಟ್‌ಗೆ ಶಾಸಕ ಕುಮಠಳ್ಳಿ ಹಾಜರು: ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2019, 19:05 IST
Last Updated 20 ಫೆಬ್ರುವರಿ 2019, 19:05 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ನನ್ನನ್ನು ಯಾರೂ ಯಾವತ್ತೂ ಅಪಹರಣ ಮಾಡಿಲ್ಲ ಹಾಗೂ ನಾನು ಯಾರ ಬಂಧನದಲ್ಲೂ ಇಲ್ಲ’ ಎಂದು ಅಥಣಿ ವಿಧಾನಸಭಾ ಕ್ಷೇತ್ರದ ಶಾಸಕ ಮಹೇಶ್ ಕುಮಠಳ್ಳಿ ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿದ್ದಾರೆ.

‘ಕುಮಠಳ್ಳಿ ನಾಪತ್ತೆಯಾಗಿದ್ದಾರೆ ಅವರನ್ನು ಹುಡುಕಿಕೊಡಲು ಪೊಲೀಸರಿಗೆ ನಿರ್ದೇಶಿಸಬೇಕು’ ಎಂದು ಕೋರಿರುವ ಹೇಬಿಯಸ್ ಕಾರ್ಪಸ್ ಅರ್ಜಿಗೆ ಸಂಬಂಧಿಸಿದಂತೆ ಅವರು ಬುಧವಾರ ಖುದ್ದು ಹೈಕೋರ್ಟ್‌ಗೆ ಹಾಜರಾದರು.

ಈ ಕುರಿತ ಅರ್ಜಿಯನ್ನು ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಮತ್ತು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ADVERTISEMENT

ವಿಚಾರಣೆ ವೇಳೆ ಕುಮಠಳ್ಳಿ ಪರ ಹಾಜರಾದ ವಕೀಲ ಡಿ.ಎಸ್.ಜೀವನ್‌ ಕುಮಾರ್‌ ಪ್ರಮಾಣ ಪತ್ರ ಸಲ್ಲಿಸಿ, ‘ಹೇಬಿಯಸ್‌ ಕಾರ್ಪಸ್ ಅರ್ಜಿಯಲ್ಲಿರುವ ಅಂಶಗಳು ಸತ್ಯಕ್ಕೆ ದೂರವಾಗಿವೆ ಮತ್ತು ಕುಮಠಳ್ಳಿ ಅವರ ಮನಸ್ಸಿಗೆ ಅತೀವ ನೋವನ್ನುಂಟು ಮಾಡಿವೆ’ ಎಂದರು.

ರಾಜ್ಯ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್.ಪೊನ್ನಣ್ಣ, ‘ಅರ್ಜಿದಾರರು ಫೆಬ್ರುವರಿ 7ರಂದು ಅಥಣಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅದೇ ವೇಗದಲ್ಲಿ 8ರಂದು ಹೈಕೋರ್ಟ್ ಕದ ಬಡಿದು ಹೇಬಿಯಸ್‌ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ. ಇದು ಮೇಲ್ನೋಟಕ್ಕೇ ಪ್ರಚಾರಪ್ರಿಯ ಅರ್ಜಿ ಎಂಬುದು ಅರಿವಾಗುತ್ತದೆ’ ಎಂದು ಆಕ್ಷೇಪಿಸಿದರು.

‘ಅರ್ಜಿದಾರರು ವೃಥಾ ಕೋರ್ಟ್ ಸಮಯವನ್ನು ಹಾಳು ಮಾಡಿದ್ದಾರೆ. ಆದ್ದರಿಂದ ಅವರಿಗೆ ಕಾನೂನು ರೀತ್ಯಾ ಭಾರಿ ದಂಡ ವಿಧಿಸಲೇಬೇಕು’ ಎಂದರು.

ಈ ಮನವಿ ಪರಿಗಣಿಸಿದ ನ್ಯಾಯಪೀಠ, ಈ ಕುರಿತಂತೆ 27ರಂದು ಸೂಕ್ತ ಆದೇಶ ಪ್ರಕಟಿಸುವುದಾಗಿ ಹೇಳಿತು. ಅಂತೆಯೇ ಹೇಬಿಯಸ್‌ ಕಾರ್ಪಸ್‌ ಅರ್ಜಿ ವಜಾ ಮಾಡಿ ಆದೇಶಿಸಿತು.

‘ಕುಮಠಳ್ಳಿ ಅವರನ್ನು ಶಾಸಕ ರಮೇಶ ಜಾರಕಿಹೊಳಿ ಬಂಧನದಲ್ಲಿ ಇರಿಸಿ ಕೊಂಡಿದ್ದಾರೆ. ಕೂಡಲೇ ಪತ್ತೆ ಹಚ್ಚಿ ಕೋರ್ಟ್‌ ಮುಂದೆ ಹಾಜರುಪಡಿಸಲು ನಿರ್ದೇಶಿಸಬೇಕು’ ಎಂದು ಕೋರಿ ಅಥಣಿಯ ವಕೀಲ ಹಾಗೂ ಯುವ ಕಾಂಗ್ರೆಸ್ ಕಾರ್ಯದರ್ಶಿ ಪ್ರಮೋದ ದಯಾನಂದ ಹಿರೇಮನಿ ಈ ಅರ್ಜಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.