ADVERTISEMENT

ಬಗರ್‌ಹುಕುಂ: ಸುತ್ತೋಲೆ ವಾಪಸ್‌ಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2021, 17:13 IST
Last Updated 2 ಫೆಬ್ರುವರಿ 2021, 17:13 IST

ಬೆಂಗಳೂರು: ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ‘ಬಗರ್‌ ಹುಕುಂ‘ ಯೋಜನೆಯ ಅನರ್ಹ ಅರ್ಜಿಗಳನ್ನು ವಿಲೇವಾರಿ ಮಾಡಲು ಗಡುವು ವಿಧಿಸಿ ಜನವರಿ 30ರಂದು ಕಂದಾಯ ಇಲಾಖೆ ಹೊರಡಿಸಿರುವ ಸುತ್ತೋಲೆಯನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ಬಿಜೆಪಿ ಶಾಸಕರಾದ ಆರಗ ಜ್ಞಾನೇಂದ್ರ ಮತ್ತು ಕೆ.ಜಿ. ಬೋಪಯ್ಯ ವಿಧಾನಸಭೆಯಲ್ಲಿ ಮಂಗಳವಾರ ಆಗ್ರಹಿಸಿದರು.

ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯ ಮಂಡಿಸಿ ಮಾತನಾಡುವಾಗ ವಿಷಯ ಪ್ರಸ್ತಾಪಿಸಿದ ಜ್ಞಾನೇಂದ್ರ, ‘ಕಂದಾಯ ಇಲಾಖೆ ಹೊರಡಿಸಿರುವ ಸುತ್ತೋಲೆ ದುರ್ಬಳಕೆಯಾಗುವ ಸಾಧ್ಯತೆ ಇದೆ. ನಮೂನೆ 50, 53 ಮತ್ತು 57ರ ಅಡಿಯಲ್ಲಿ ಅರ್ಜಿ ಸಲ್ಲಿಸಿರುವ ಗ್ರಾಮೀಣ ಪ್ರದೇಶದ ರೈತರನ್ನು ಸಾಗುವಳಿ ಪ್ರದೇಶದಿಂದ ಒಕ್ಕಲೆಬ್ಬಿಸಲು ಈ ಸುತ್ತೋಲೆ ಕಾರಣವಾಗುವ ಅಪಾಯವಿದೆ. ಲಕ್ಷಗಟ್ಟಲೆ ಕುಟುಂಬಗಳಿಗೆ ತೊಂದರೆ ಆಗುತ್ತದೆ. ಸುತ್ತೋಲೆ ಕುರಿತು ಪುನರ್‌ ಪರಿಶೀಲನೆ ನಡೆಸಬೇಕು’ ಎಂದರು.

ಬೋಪಯ್ಯ ಮಾತನಾಡಿ, ‘ಇದು ಅಧಿಕಾರಿಗಳು ಹೊರಡಿಸಿರುವ ಸುತ್ತೋಲೆ. ಇದರಿಂದ ಮಲೆನಾಡಿನ ಜನರಿಗೆ ತೊಂದರೆ ಆಗುತ್ತದೆ. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಇಂತಹ ಕ್ರಮಕ್ಕೆ ಅವಕಾಶ ನೀಡುವುದಿಲ್ಲ ಎಂಬ ಭರವಸೆ ಇದೆ. ಅವರು ಸದನದಲ್ಲಿ ಈ ಕುರಿತು ಸ್ಪಷ್ಟಪಡಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.