ADVERTISEMENT

ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2019, 7:01 IST
Last Updated 22 ಡಿಸೆಂಬರ್ 2019, 7:01 IST
   

ಬೆಂಗಳೂರು: ಉಪ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಕಾರ್ಯಕ್ರಮ ಆರಂಭವಾಗಿದೆ.ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನೂತನ ಶಾಸಕರು ಸೇರಿದಂತೆ ಹಲವು ನಾಯಕರುಸೇರಿದ್ದಾರೆ.

ಕೆ.ಆರ್‌.ಪುರಂನ ಭೈರತಿ ಬಸವರಾಜ್, ಮಹಾಲಕ್ಷ್ಮೀ ಲೇಔಟ್‌ನ ಗೋಪಾಲಯ್ಯ, ಕೆ.ಆರ್.ಪೇಟೆಯ ನಾರಾಯಣಗೌಡ, ಚಿಕ್ಕಬಳ್ಳಾಪುರದ ಸುಧಾಕರ್, ಹಿರೆಕೆರೂರು ಕ್ಷೇತ್ರದ ಬಿ.ಸಿ.ಪಾಟೀಲ್, ಕಾಗವಾಡ ಕ್ಷೇತ್ರದ ಶ್ರೀಮಂತ್ ಪಾಟೀಲ್, ಯಶವಂತಪುರದ ಎಸ್‌.ಟಿ. ಸೋಮಶೇಖರ್, ರಾಣೆಬೆನ್ನೂರು ಕ್ಷೇತ್ರದ ಅರುಣ್‌ ಕುಮಾರ್, ಅಥಣಿಯ ಮಹೇಶ್ ಕುಮಠಳ್ಳಿ, ಹೊಸಕೋಟೆಯ ಶರತ್ ಬಚ್ಚೇಗೌಡ, ಯಲ್ಲಾಪುರದ ಶಿವರಾಮ್ ಹೆಬ್ಬಾರ್, ವಿಜಯನಗರದ ಆನಂದ್ ಸಿಂಗ್, ಗೋಕಾಕ ಕ್ಷೇತ್ರದ ರಮೇಶ್ ಜಾರಕಿಹೊಳಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣ ವಚನ ಸ್ವೀಕರಿಸಿದ ಶರತ್ ಬಚ್ಚೇಗೌಡ

ಕಾಂಗ್ರೆಸ್ಸಿನ ಶಾಸಕರಾದ ಹುಣಸೂರು ಕ್ಷೇತ್ರದ ಮಂಜುನಾಥ್ ಮತ್ತು ಶಿವಾಜಿನಗರ ಕ್ಷೇತ್ರದ ರಿಜ್ವಾನ್ ಅರ್ಷದ್ ಬಿಟ್ಟು ಉಳಿದ ಎಲ್ಲರೂ ಪ್ರಮಾಣ ಸ್ವೀಕರಿಸಿದರು. ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಮಾಣ ಬೋಧಿಸಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ, ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಇದ್ದರು.

ADVERTISEMENT

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರಮಾಣ ವಚನ ಬೋಧಿಸಿದರು. ನೂತನ ಶಾಸಕರು ಪ್ರಮಾಣ ವಚನ ಸ್ವೀಕರಿಸಿದ ನಂತರ ವಿಧಾನಸಭಾಧ್ಯಕ್ಷ ಕಾಗೇರಿ ಸಂವಿಧಾನ ಕುರಿತು ಪುಸ್ತಕ ಮತ್ತು ಹೂಗುಚ್ಛ ನೀಡಿ ಅಭಿನಂದಿಸಿದರು.

ಕಾಂಗ್ರೆಸ್‌, ಜೆಡಿಎಸ್‌ ಶಾಸಕರಾಗಿ ಆಯ್ಕೆಯಾಗಿ ಒಂದು ವರ್ಷದಲ್ಲೇ ರಾಜೀನಾಮೆ ಕೊಟ್ಟವರ ಪೈಕಿ 11 ಮಂದಿ ಮರು ಆಯ್ಕೆಯಾಗಿದ್ದು, ಒಂದೂವರೆ ವರ್ಷದಲ್ಲೇ ಎರಡನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣ ವಚನ ಸ್ವೀಕರಿಸಿದ ಶಾಸಕರೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ರಾಣೆಬೆನ್ನೂರಿನ ಅರುಣ ಪೂಜಾರ ಹಾಗೂ ಹೊಸಕೋಟೆಯ ಶರತ್ ಬಚ್ಚೇಗೌಡಮೊದಲ ಬಾರಿ ಶಾಸಕರಾಗಿ ಆಯ್ಕೆಯಾದವರು. ಶಿವಾಜಿನಗರದ ರಿಜ್ವಾನ್ ಅರ್ಷದ್‌ ಅವರು ಸದ್ಯ ವಿಧಾನಪರಿಷತ್ತಿನ ಸದಸ್ಯರಾಗಿದ್ದು, ವಿಧಾನಸಭೆಯನ್ನು ಮೊದಲ ಬಾರಿ ಪ್ರವೇಶಿಸುತ್ತಿದ್ದಾರೆ.

ಹುಣಸೂರಿನ ಎಚ್.ಪಿ. ಮಂಜುನಾಥ್‌ ಈ ಹಿಂದೆ ಎರಡು ಬಾರಿ ಶಾಸಕರಾಗಿದ್ದು, 2018ರಲ್ಲಿ ಸೋಲುಕಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.