ಮೈಸೂರು: ‘ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ಕೈತಪ್ಪಿದ್ದಕ್ಕೆ ಯಾವುದೇ ಬೇಸರವಿಲ್ಲ. ಎಲ್ಲದಕ್ಕೂ ಕಾಲವೇ ಉತ್ತರಿಸಲಿದೆ’ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಬುಧವಾರ ಇಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿ, ‘ರಾಜ್ಯ ಕೋರ್ ಕಮಿಟಿ ಅನಿರೀಕ್ಷಿತವಾಗಿ ನನ್ನ ಹೆಸರನ್ನು ಕೂಡಾ ಶಿಫಾರಸು ಮಾಡಿತ್ತು. ಹೈಕಮಾಂಡ್ ತೀರ್ಮಾನವನ್ನು ಗೌರವಿಸುತ್ತೇನೆ. ಮುಂದೆ ರಾಜಕಾರಣದಲ್ಲಿ ಸಾಕಷ್ಟು ಅವಕಾಶಗಳು ಇವೆ. ನಿರುತ್ಸಾಹಗೊಳ್ಳುವ ಸಂದರ್ಭ ಸೃಷ್ಟಿಯಾಗುವುದಿಲ್ಲ’ ಎಂದರು.
‘ನನ್ನ ಒಬ್ಬನ ಹೆಸರು ಮಾತ್ರ ತಿರಸ್ಕೃತಗೊಂಡಿಲ್ಲ. ರಾಜ್ಯದ ನಾಯಕರು 18–19 ಹೆಸರುಗಳನ್ನು ಶಿಫಾರಸು ಮಾಡಿದ್ದರು. ಅದರಲ್ಲಿ ನಾಲ್ಕು ಮಂದಿಗೆ ಮಾತ್ರ ಅವಕಾಶ ಸಿಕ್ಕಿದೆ’ ಎಂದು ನುಡಿದರು.
ಬಿಜೆಪಿ ಹೈಕಮಾಂಡ್ ಕುಟುಂಬ ರಾಜಕಾರಣ ಪ್ರೋತ್ಸಾಹಿಸದೇ ಇರುವುದು ಟಿಕೆಟ್ ತಪ್ಪಲು ಕಾರಣವಾಯಿತೇ ಎಂಬ ಪ್ರಶ್ನೆಗೆ, ‘ಯಡಿಯೂರಪ್ಪ ಅವರ ಪುತ್ರನಾಗಿ ನನಗೆ ರಾಜ್ಯ ಉಪಾಧ್ಯಕ್ಷನ ಜವಾಬ್ದಾರಿ ಕೊಟ್ಟಿದ್ದಾರೆ. ಹಾಗಾಗಿ ಆದು ಕಾರಣ ಅಲ್ಲ. ಶಾಸಕ, ಮಂತ್ರಿ ಆಗಬೇಕು ಎಂಬ ಗುರಿ ಇಟ್ಟುಕೊಂಡು ಕೆಲಸ ಮಾಡುತ್ತಿಲ್ಲ. ಪಕ್ಷ ಸಂಘಟನೆ ಮಾಡಿ ನಾನು ಕೂಡಾ ಮುಂದಿನ ದಿನಗಳಲ್ಲಿ ಇನ್ನಷ್ಟು ಬೆಳೆಯಬೇಕು ಎಂಬ ಉದ್ದೇಶ ಇಟ್ಟುಕೊಂಡಿದ್ದೇನೆ’ ಎಂದು ಉತ್ತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.