ADVERTISEMENT

ಅಲ್ಪಸಂಖ್ಯಾತರ ಆಯೋಗಕ್ಕೆ ಬಾವಾ, ಪರಿಷತ್ತಿಗೆ ತಿಪ್ಪಣ್ಣಪ್ಪ

​ಪ್ರಜಾವಾಣಿ ವಾರ್ತೆ
Published 29 ಮೇ 2019, 20:13 IST
Last Updated 29 ಮೇ 2019, 20:13 IST
ವಿಧಾನ ಪರಿಷತ್‌ ಸದಸ್ಯರಾಗಿ ನೇಮಕಗೊಂಡ ತಿಪ್ಪಣ್ಣಪ್ಪ ಕಮಕನೂರ ಅವರನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಬೆಂಗಳೂರಿನಲ್ಲಿ ಅಭಿನಂದಿಸಿದರು. ಕೆ.ಸಿ. ಕೊಂಡಯ್ಯ ಇದ್ದರು
ವಿಧಾನ ಪರಿಷತ್‌ ಸದಸ್ಯರಾಗಿ ನೇಮಕಗೊಂಡ ತಿಪ್ಪಣ್ಣಪ್ಪ ಕಮಕನೂರ ಅವರನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಬೆಂಗಳೂರಿನಲ್ಲಿ ಅಭಿನಂದಿಸಿದರು. ಕೆ.ಸಿ. ಕೊಂಡಯ್ಯ ಇದ್ದರು   

ಬೆಂಗಳೂರು: ವಿಧಾನ ಪರಿಷತ್ ಸದಸ್ಯರಾಗಿ ಕಲಬುರ್ಗಿಯ ತಿಪ್ಪಣ್ಣಪ್ಪ ಕಮಕನೂರ ಹಾಗೂರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿ ಜಿ.ಎ.ಬಾವಾ ಅವರನ್ನು ನೇಮಕ ಮಾಡಲಾಗಿದೆ.

ವಿ.ಎಸ್.ಉಗ್ರಪ್ಪ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ತಿಪ್ಪಣ್ಣಪ್ಪ ಅವರನ್ನು ನೇಮಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ಇವರ ಅಧಿಕಾರ ಅವಧಿ 2020 ಜೂನ್ 23ರ ವರೆಗೆ ಇರಲಿದೆ.

ಕೋಲಿ ಸಮಾಜದ ನಾಯಕರಾಗಿದ್ದ ಬಾಬುರಾವ್ ಚಿಂಚನಸೂರ ಕಾಂಗ್ರೆಸ್ ತೊರೆದು, ಬಿಜೆಪಿ ಸೇರಿದ್ದಾರೆ. ಕಲಬುರ್ಗಿ ಭಾಗದಲ್ಲಿ ಕೋಲಿ ಸಮುದಾಯ ಗಣನೀಯ ಸಂಖ್ಯೆಯಲ್ಲಿ ಇರುವುದರಿಂದ ಚಿಂಚನಸೂರ ಬದಲಿಗೆ ಮತ್ತೊಬ್ಬರಿಗೆ ಅವಕಾಶ ನೀಡಲು ಕಾಂಗ್ರೆಸ್ ಮುಖಂಡರು ಮುಂದಾಗಿದ್ದರು. ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆಸಲಹೆ ಮೇರೆಗೆ ತಿಪ್ಪಣ್ಣಪ್ಪ ಅವರನ್ನು ನೇಮಕ ಮಾಡುವಂತೆ ಸರ್ಕಾರ ಶಿಫಾರಸು ಮಾಡಿತ್ತು.

ADVERTISEMENT

ಲೋಕಸಭೆ ಚುನಾವಣೆಯ ಲೆಕ್ಕಾಚಾರ ಇಟ್ಟುಕೊಂಡಿದ್ದ ಕಾಂಗ್ರೆಸ್‌ ನಾಯಕರು, ತಿಪ್ಪಣ್ಣಪ್ಪ ಅವರನ್ನು ನೇಮಕ ಮಾಡುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದರು. ಈ ಕಡತ ರಾಜಭವನದಲ್ಲೇ ಉಳಿದಿತ್ತು. ಚುನಾವಣೆ ನಂತರ ರಾಜ್ಯ‍ಪಾಲರು ಆದೇಶ ಹೊರಡಿಸಿದ್ದಾರೆ.

ನೇಮಕ: ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್, ಜೆಡಿಎಸ್ ಮುಖಂಡರು ಪ್ರಯತ್ನ ಮುಂದುವರಿಸಿರುವುದರ ನಡುವೆಯೇ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿ ಜಿ.ಎ.ಬಾವಾ ಅವರನ್ನು ನೇಮಿಸಿದೆ. ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಆಯೋಗದ ಅಧ್ಯಕ್ಷರ ಸ್ಥಾನ ಖಾಲಿ ಇತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.