ADVERTISEMENT

ಪಕ್ಷಾಂತರ ನಿಷೇಧ ಕಾಯ್ದೆ ತಿದ್ದುಪಡಿಗೆ ಶಾಸಕ ಶ್ರೀನಿವಾಸ ಮಾನೆ ಒತ್ತಾಯ

ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ

​ಪ್ರಜಾವಾಣಿ ವಾರ್ತೆ
Published 16 ಜನವರಿ 2019, 20:15 IST
Last Updated 16 ಜನವರಿ 2019, 20:15 IST
ಶ್ರೀನಿವಾಸ ಮಾನೆ
ಶ್ರೀನಿವಾಸ ಮಾನೆ   

ಹುಬ್ಬಳ್ಳಿ: ಶಾಸಕರು, ಸಂಸದರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಅವಧಿಗೂ ಮುನ್ನವೇ ರಾಜೀನಾಮೆ ನೀಡಿ ಬೇರೊಂದು ಪಕ್ಷಕ್ಕೆ ಸೇರ್ಪಡೆಗೊಂಡಾಗ, ಅದೇ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅಂಥವರಿಗೆ ಅವಕಾಶ ನಿರ್ಬಂಧಿಸಲು ಪಕ್ಷಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಶ್ರೀನಿವಾಸ ಮಾನೆ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಮುಖ್ಯ ಚುನಾವಣಾಧಿಕಾರಿ ಅವರಿಗೆ ಈಗಾಗಲೇ ಪತ್ರ ಬರೆದಿರುವುದಾಗಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ ಅವರು, ಇಂಥ ಕಾಯ್ದೆ ಜಾರಿಯಾದರೆ ಪಕ್ಷಾಂತರಗೊಳ್ಳುವವರ ಸಂಖ್ಯೆ ಕಡಿಮೆಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಶಾಸಕರು, ಸಂಸದರು ಪಕ್ಷಾಂತರಗೊಂಡ ನಂತರ ಚುನಾವಣಾ ಆಯೋಗವು ಅನಿವಾರ್ಯವಾಗಿ ಉಪ ಚುನಾವಣೆ ನಡೆಸಬೇಕಾಗುತ್ತದೆ. ಇದರಿಂದ ವ್ಯಯವಾಗುವ ಹಣದಿಂದ ದೇಶದ ಪ್ರಗತಿಗೆ ತೀರಾ ಹಿನ್ನಡೆಯಾಗುತ್ತದೆ ಹಾಗೂ ಸರ್ಕಾರಕ್ಕೆ ಆರ್ಥಿಕ ಬಿಕ್ಕಟ್ಟು ಎದುರಾಗುತ್ತದೆ ಎಂದರು.

ADVERTISEMENT

ಒಂದು ಪಕ್ಷದಿಂದ ಆಯ್ಕೆಯಾಗಿ ಮತ್ತೊಂದು ಪಕ್ಷಕ್ಕೆ ಹೋಗುವುದು ಭ್ರಷ್ಟಾಚಾರಕ್ಕೆ ಉತ್ತೇಜನ ನೀಡಿದಂತಾಗುತ್ತದೆ. ಯಾವುದೇ ಒಂದು ರಾಜಕೀಯ ಪಕ್ಷ ತನ್ನ ಸಿದ್ಧಾಂತಗಳ ಮೇಲೆ ಆಡಳಿತ ಮತ್ತು ರಾಜಕಾರಣ ಮಾಡುತ್ತಿರುತ್ತದೆ. ಹೀಗಾಗಿ, ರಾಜಕೀಯ ಪಕ್ಷವೊಂದನ್ನು ಸೇರಿಕೊಳ್ಳುವ ಪ್ರತಿಯೊಬ್ಬ ವ್ಯಕ್ತಿಯೂ ಆ ಪಕ್ಷದ ಸಿದ್ಧಾಂತಗಳನ್ನು ಸಾರ್ವಜನಿಕ ಜೀವನದಲ್ಲಿ ಅನುಸರಿಸಬೇಕಾಗುತ್ತದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.