ಮಂಡ್ಯ: ಬಿಜೆಪಿ ನಾಯಕ ಕೆ.ನಾಗಣ್ಣಗೌಡ ಅವರನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
2016ರಿಂದ 2018ರವರೆಗೆ ಅವರು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ಅದಕ್ಕೂ ಮೊದಲು ಹಲವು ವರ್ಷಗಳ ಕಾಲ ಮಕ್ಕಳು ಹಾಗೂ ಯುವಜನ ಸೇವಾ ಚಟುವಟಿಕೆಗಳಲ್ಲಿ ಗುರುತಿಸಿಕೊಂಡು ಯುವ ರಾಷ್ಟ್ರಪ್ರಶಸ್ತಿ ಪಡೆದಿದ್ದರು. ವಿಕಸನ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. 5 ವರ್ಷ ಬಾಲ ಕಾರ್ಮಿಕ ಮಕ್ಕಳ ಶಾಲೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಸಾಕ್ಷರತಾ ಆಂದೋಲನದಲ್ಲಿ ಜಿಲ್ಲಾ ಕಾರ್ಯದರ್ಶಿಯಾಗಿ ಕೆಲಸ ಮಾಡುವ ಮೂಲಕ ಸೇವಾ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿದ್ದರು. ರಾಜ್ಯ ಸ್ವಯಂಸೇವಾ ಸಂಸ್ಥೆಗಳ ಒಕ್ಕೂಟದಲ್ಲಿ ಕೆಲಸ ಮಾಡಿದ್ದರು. ‘ಧ್ವನಿ’ ಸ್ವಯಂ ಸೇವಾ ಸಂಸ್ಥೆ ಸ್ಥಾಪಿಸಿ ಮಕ್ಕಳ ಪರ ಚಟುವಟಿಕೆ ನಡೆಸಿದ್ದರು.
ಶಾಲೆ ಬಿಟ್ಟ ಮಕ್ಕಳಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಅಭಿಯಾನ ನಡೆಸಿದ್ದರು. ಬೀದಿ ನಾಟಕ ಆಯೋಜನೆ ಮಾಡುವ ಮೂಲಕ ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು. ಬಿಆರ್ವಿ ಶಿಕ್ಷಣ ಸಂಸ್ಥೆ ಸಂಸ್ಥಾಪಕರಲ್ಲಿ ಒಬ್ಬರಾದ ಅವರು ಹಲವು ಎನ್ಜಿಒಗಳ ಜೊತೆಯಲ್ಲೂ ಗುರುತಿಸಿಕೊಂಡಿದ್ದಾರೆ.
‘ಮೂರು ದಶಕಗಳಿಗೂ ಹೆಚ್ಚುಕಾಲ ಮಕ್ಕಳ ಅಭಿವೃದ್ಧಿ ಚಟುವಟಿಕೆಯಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಸಂದರ್ಭದಲ್ಲಿ ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯುವುದು ಪ್ರಮುಖ ಆದ್ಯತೆಯಾಗಿದೆ’ ಎಂದು ಕೆ.ನಾಗಣ್ಣಗೌಡ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.