ADVERTISEMENT

ಸುರಂಗ ರಸ್ತೆ ಯೋಜನೆಯನ್ನು ಪ್ರಧಾನಿ ಮೋದಿ ಮೆಚ್ಚಿದ್ದಾರೆ: ಡಿ.ಕೆ.ಶಿವಕುಮಾರ್‌

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2025, 23:55 IST
Last Updated 12 ನವೆಂಬರ್ 2025, 23:55 IST
ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್   

ಬೆಂಗಳೂರು: ಸುರಂಗ ರಸ್ತೆ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರೇ ಮೆಚ್ಚಿ, ಸಲಹೆ ನೀಡಿದ್ದಾರೆ. ಆದರೆ, ಕರ್ನಾಟಕದ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಡಬಲ್‌ ಡೆಕ್ಕರ್‌’ ರಸ್ತೆ ಯೋಜನೆಯ ನೀಲನಕ್ಷೆಯನ್ನೂ ನರೇಂದ್ರ ಮೋದಿ ಅವರಿಗೆ ತೋರಿಸಿದೆ. ರಸ್ತೆಯ ಸ್ವರೂಪ, ಗಾತ್ರದ ಬಗ್ಗೆ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರೂ ಸಂತೋಷ ವ್ಯಕ್ತಪಡಿಸಿದ್ದಾರೆ.  ಬೆಂಗಳೂರಿನಲ್ಲಿ ಶೇ 50ರಷ್ಟು ಭಾಗ ಕಲ್ಲಿದೆ. ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡೆ ಯೋಜನೆ ಮಾಡಿದ್ದೇವೆ. ಮೆಟ್ರೊ ರೈಲು ಶೇ 50ರಷ್ಟು ಸುರಂಗ ಮಾರ್ಗದಲ್ಲೇ ಚಲಿಸುತ್ತದೆ. ಆಗ ಯಾರೂ ಮಾತನಾಡಲಿಲ್ಲ. ಮುಂದಿನ ಪೀಳಿಗೆಯ ಭವಿಷ್ಯಕ್ಕೆ, ಬೆಂಗಳೂರಿಗಾಗಿ ಕೆಲಸ ಮಾಡುತ್ತಿದ್ದೇವೆ. ಪುಣೆ, ಮುಂಬೈ, ದೆಹಲಿಯಲ್ಲೂ ಸುರಂಗ ರಸ್ತೆ ಮಾಡಿದ್ದಾರೆ. ಅಲ್ಲಿ ಇಲ್ಲದ ವಿರೋಧ ಕರ್ನಾಟಕದಲ್ಲಿ ಏಕೆ? ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿ ಇರುವ ಕಾರಣಕ್ಕೆ ವಿರೋಧ ಮಾಡುತ್ತಿದ್ದಾರೆ. ಬಿಜೆಪಿ ಯಾವಾಗಲೂ ಕರ್ನಾಟಕದ ಅಭಿವೃದ್ಧಿ ವಿರೋಧಿ’ ಎಂದು ದೂರಿದರು.

‘ವಿರೋಧ ಇದ್ದಷ್ಟು ಎಚ್ಚರಿಕೆಯಿಂದ ಇರಬೇಕಾಗುತ್ತದೆ. ನಮ್ಮ ಅಧಿಕಾರಿಗಳು ಜಾಗೃತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಾಧ್ಯಮಗಳು ಅಧ್ಯಯನ ಮಾಡಿ ವರದಿ ಬರೆದಿದ್ದಾರೆ. ಅವರ ವರದಿಯಲ್ಲಿನ ಒಳ್ಳೆಯ ಅಂಶಗಳನ್ನು ಸ್ವೀಕರಿಸುತ್ತೇವೆ. ತಪ್ಪಾಗಿದ್ದರೆ ತಿದ್ದಿಕೊಳ್ಳಲು ಸಿದ್ಧರಿದ್ದೇವೆ’ ಎಂದು ಹೇಳಿದರು.

ADVERTISEMENT

‘ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ನೀಡಲು ಕೇಂದ್ರ ಸರ್ಕಾರ ಸತಾಯಿಸುತ್ತಿದೆ. ರಾಜ್ಯವನ್ನು ಪ್ರತಿನಿಧಿಸುವ ಸಂಸದರು ಅನ್ಯಾಯದ ವಿರುದ್ಧ ಹೋರಾಟ ಮಾಡಬೇಕು. ಮಹದಾಯಿ, ಮೇಕೆದಾಟು, ಎತ್ತಿನಹೊಳೆ ಸೇರಿದಂತೆ ರಾಜ್ಯದಲ್ಲಿ ಅನುಷ್ಠಾನಗೊಳ್ಳುತ್ತಿರುವ ನೀರಾವರಿ ಯೋಜನೆಗಳಿಗೆ ತ್ವರಿತವಾಗಿ ಅನುಮತಿ ನೀಡುವಂತೆ ಕೇಂದ್ರದ ಮೇಲೆ ಒತ್ತಡ ಹಾಕಲು ನಿಯೋಗ ತೆಗೆದುಕೊಂಡು ಹೋಗಲಾಗುವುದು. ಎಲ್ಲ ಪಕ್ಷಗಳ ಸಂಸದರನ್ನೂ ಆಹ್ವಾನಿಸಲಾಗುವುದು’ ಎಂದರು.

‘ಬೆಂಗಳೂರಿನಲ್ಲಿ ಮಾತನಾಡಿದರೆ ಆಗುವುದಿಲ್ಲ, ದೆಹಲಿಗೆ ಬನ್ನಿ’ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

‘ಅವರ ಮನೆಗೆ ಉಪಾಹಾರಕ್ಕೆ ಹೋಗುತ್ತಿದ್ದೇನೆ. ಸಂಸತ್ ಅಧಿವೇಶನದ ವೇಳೆ ಸಂಸದರನ್ನು ಕರೆದುಕೊಂಡು ಹೋಗಿ ಚರ್ಚೆ ಮಾಡಬೇಕು. ಅವರು ಕೇಂದ್ರ ಜಲಶಕ್ತಿ ಸಚಿವರು. ಅವರನ್ನು ಬಿಟ್ಟು ಏನು ಮಾಡಲೂ ಆಗುವುದಿಲ್ಲ’ ಎಂದರು.

‘ಎತ್ತಿನಹೊಳೆ ಯೋಜನೆಗೆ ತಕರಾರು ಹೆಚ್ಚಾಗಿದೆ. ಒಂದು ಭಾಗದಿಂದ ಮತ್ತೊಂದು ಖಾಲಿ ಜಾಗಕ್ಕೆ ಮಣ್ಣು ಎತ್ತಿ ಹಾಕಿದರೂ ತಕರಾರು ತೆಗೆಯುತ್ತಾರೆ. ಹಾಗಾಗಿ, ಕೇಂದ್ರದ ಮೇಲೆ ಒತ್ತಡ ಹಾಕುತ್ತೇವೆ. ‘ನೀರಿನ ಹೆಜ್ಜೆ’ ಎಂಬ ಪುಸ್ತಕವನ್ನು ನ.14ರಂದು ಬಿಡುಗಡೆ ಮಾಡಲಿದ್ದೇವೆ. ಅಂದು ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಮಾತನಾಡುತ್ತೇನೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.