ಬೆಂಗಳೂರು: ಗುರುಗ್ರಾಮದ ಮೇದಾಂತಾ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ನಿಧನರಾದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಮೋಹನ ಶಾಂತನಗೌಡರ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಚಾಮರಾಜಪೇಟೆಯ ಸ್ಮಶಾನದಲ್ಲಿ ಸರ್ಕಾರಿ ಗೌರವಗಳೊಂದಿಗೆ ಭಾನುವಾರನೆರವೇರಿಸಲಾಯಿತು.
ಶಾಂತನಗೌಡರ ಪಾರ್ಥಿವ ಶರೀರವನ್ನು ರಾಜಾಜಿನಗರದಲ್ಲಿರುವ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗಿತ್ತು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ, ಸಚಿವರಾದ ಬಸವರಾಜ ಬೊಮ್ಮಾಯಿ, ಬಿ.ಸಿ.ಪಾಟೀಲ, ವಿ.ಸೋಮಣ್ಣ ಸೇರಿದಂತೆ ಹಲವರು ಅಂತಿಮ ದರ್ಶನ ಪಡೆದು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
1958ರ ಮೇ 5ರಂದು ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ಜನಿಸಿದ್ದ ಮೋಹನ ಶಾಂತನಗೌಡರ, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲದಿಂದ ಕಾನೂನು ಪದವಿಪಡೆದಿದ್ದರು. 1980ರಲ್ಲಿ ವಕೀಲ ವೃತ್ತಿ ಆರಂಭಿಸಿದ್ದರು. 2003ರಲ್ಲಿ ರಾಜ್ಯ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರಲ್ಲದೆ, 2004ರಲ್ಲಿ ನ್ಯಾಯಮೂರ್ತಿಯಾಗಿ ಸೇವೆ ಆರಂಭಿಸಿದ್ದರು. 2016ರಿಂದ ಒಂದು ವರ್ಷ ಕೇರಳ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದ ಅವರು, 2017ರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. 2023ರ ಮೇ 4ರವರೆಗೆ ಅವರ ಸೇವಾ ಅವಧಿಇತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.