ಧಾರವಾಡ: ಸಾಹಿತಿ, ಪತ್ರಕರ್ತ, ಸಂಘಟಕ ಹಾಗೂ ಹೋರಾಟಗಾರ ಮೋಹನ ನಾಗಮ್ಮನವರ (56) ಶನಿವಾರ ಬೆಳಿಗ್ಗೆ ನಿಧನರಾದರು.
ಹಾವೇರಿ ಜಿಲ್ಲೆಯ ಅಗಡಿಯವರಾದ ಅವರಿಗೆ, ಪತ್ನಿ ಹಾಗೂ ಪುತ್ರಿ ಇದ್ದಾರೆ. ವಿದ್ಯಾರ್ಥಿ ದೆಸೆಯಿಂದಲೇ ಧಾರವಾಡದಲ್ಲಿ ನೆಲೆಸಿದ ಅವರು ಕನ್ನಡಮ್ಮ, ಲಂಕೇಶ್ ಪತ್ರಿಕೆಗೆ ವರದಿಗಾರರಾಗಿ ಕೆಲಕಾಲ ಕೆಲಸ ಮಾಡಿದ್ದರು.
ಗೋಕಾಕ್ ಚಳವಳಿ, ಹೈಕೋರ್ಟ್ ಪೀಠ ಸ್ಥಾಪನೆಗಾಗಿನ ಚಳವಳಿ ಸೇರಿದಂತೆ ಕನ್ನಡ ಪರ ಹಾಗೂ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಅದಕ್ಕಾಗಿ ಜೈಲು ವಾಸವನ್ನೂ ಅನುಭವಿಸಿದ್ದರು. ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದ ನಾಗಮ್ಮನವರ, ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸ್ಥಾಪನೆಯಲ್ಲೂ ಮುಂಚೂಣಿಯಲ್ಲಿ ನಿಂತು ಅದನ್ನು ಅಸ್ತಿತ್ವಕ್ಕೆ ತರುವಲ್ಲಿ ಯಶಸ್ವಿಯಾಗಿದ್ದರು.
ಬಂಡಾಯ ಸಾಹಿತ್ಯದಲ್ಲಿ ಸಾಕಷ್ಟು ಕೆಲಸ ಮಾಡಿದ ನಾಗಮ್ಮನವರ, 14ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಇವರ ಸಾಹಿತ್ಯ ಕೃಷಿಗೆ ಕರ್ನಾಟಕ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.
ಅಂತ್ಯಕ್ರಿಯೆ, ಧಾರವಾಡದಲ್ಲಿ ಶನಿವಾರ ಸಂಜೆ ನೆರವೇರಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.