ಬೆಂಗಳೂರು: ಹಣ ಅಕ್ರಮ ವರ್ಗಾವಣೆ ಆರೋಪದ ಅಡಿಯಲ್ಲಿ, ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೆ ಒಳಗಾಗಿದ್ದ ಐಶ್ವರ್ಯಾ ಗೌಡ ಅವರಿಗೆ ನಗರದ ಇ.ಡಿ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜಾಮೀನು ಕೋರಿ ಐಶ್ವರ್ಯಾ ಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ, ಬೆಂಗಳೂರು ನಗರ ಪ್ರಧಾನ ಮತ್ತು ಸೆಷನ್ಸ್ ಕೋರ್ಟ್ನ ಪ್ರಧಾನ ನ್ಯಾಯಾಧೀಶ ಮುರಳೀಧರ ಪೈ ಅವರು ಈ ಕುರಿತಂತೆ ಆದೇಶಿಸಿದ್ದಾರೆ.
ಅರ್ಜಿದಾರರ ಪರ ಹೈಕೋರ್ಟ್ ವಕೀಲ ಎಸ್.ಸುನಿಲ್ ಕುಮಾರ್ ಮಂಡಿಸಿದ ವಾದವನ್ನು ಪುರಸ್ಕರಿಸಿರುವ ನ್ಯಾಯಾಧೀಶರು, ‘ಐಶ್ವರ್ಯಾ ಗೌಡ ₹5 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಒದಗಿಬೇಕು. ಇಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ನೀಡಬೇಕು. ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ ಬೆಂಗಳೂರು ನಗರ ವ್ಯಾಪ್ತಿ ಪ್ರದೇಶ ಬಿಟ್ಟು ಹೋಗಬಾರದು. ವಿಳಾಸ ಬದಲಾವಣೆ ಮಾಡಬಾರದು’ ಎಂಬ ಷರತ್ತು ವಿಧಿಸಿದೆ.
‘ಯಾವುದೇ ತೆರಿಗೆ ಪಾವತಿಸದೆ, ಲೆಕ್ಕಪತ್ರಗಳ ನಿರ್ವಹಣೆ ಮಾಡದೆ ಬಹುಕೋಟಿ ಮೊತ್ತದ ವ್ಯವಹಾರ ನಡೆಸಿದ್ದಾರೆ’ ಎಂಬ ವರದಿಗಳ ಆಧಾರದಲ್ಲಿ ಐಶ್ವರ್ಯಾ ಗೌಡ ಅವರನ್ನು ಇ.ಡಿ ಬಂಧಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.