ADVERTISEMENT

ಕಾರ್ಕಳ ತಾಲ್ಲೂಕಿನಲ್ಲಿ ಮಂಗನ ಶವ ಪತ್ತೆ

ಮಣಿಪಾಲದ ಕೆಎಂಸಿಯಲ್ಲಿ 59 ಮಂದಿ ಶಂಕಿತ ಮಂಗನಕಾಯಿಲೆ ರೋಗಿಗಳಿಗೆ ಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 10 ಜನವರಿ 2019, 18:55 IST
Last Updated 10 ಜನವರಿ 2019, 18:55 IST
ಸಾಂದರ್ಭಿಕ
ಸಾಂದರ್ಭಿಕ    

ಉಡುಪಿ: ಕಾರ್ಕಳ ತಾಲ್ಲೂಕಿನ ಹಿರ್ಗಾಣ ಗ್ರಾಮದಲ್ಲಿ ಗುರುವಾರ ಮತ್ತೊಂದು ಮಂಗನ ಶವ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಮಂಗನಕಾಯಿಲೆ ಭೀತಿ ಹೆಚ್ಚಾಗಿದೆ.

ಎರಡು ದಿನಗಳ ಹಿಂದೆ ಕುಂದಾಪುರ ತಾಲ್ಲೂಕಿನ ಸಿದ್ದಾಪುರ, ಹೊಸಂಗಡಿ ಹಾಗೂ ಶೀರೂರಿನಲ್ಲಿ 4 ಮಂಗಗಳ ಶವ ಪತ್ತೆಯಾಗಿತ್ತು. ದಿನೇದಿನೇ ಮಂಗಗಳ ಸಾವು ಹೆಚ್ಚುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ.

ಈ ಸಂಬಂಧ ಪ್ರಜಾವಾಣಿ ಜತೆ ಮಾತನಾಡಿದ ಡಿಎಚ್‌ಒ ಡಾ.ರೋಹಿಣಿ, ‘ಸತ್ತ ಮಂಗಗಳ ಶವಪರೀಕ್ಷೆ ನಡೆಸಲಾಗಿದ್ದು, ದೇಹದ ಭಾಗಗಳನ್ನು ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಮೂರು ದಿನಗಳ ಬಳಿಕ ವರದಿ ಕೈಸೇರಲಿದ್ದು, ಮಂಗಗಳ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದರು.

ADVERTISEMENT

ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಮಂಗನಕಾಯಿಲೆ ಹರಡುವ ಉಣ್ಣೆಗಳ ನಿಯಂತ್ರಣಕ್ಕೆ ಪಶ್ಚಿಮಘಟ್ಟಗಳ ತಪ್ಪಲಿನ ಗ್ರಾಮಗಳಲ್ಲಿ ರಾಸಾಯನಿಕ ಸಿಂಪರಣೆ ಮಾಡಲಾಗುತ್ತಿದೆ ಎಂದು ಡಿಎಚ್‌ಒ ತಿಳಿಸಿದರು.

ಕಾರ್ಕಳ ಕುಂದಾಪುರ ವ್ಯಾಪ್ತಿಯಲ್ಲಿ ಶಂಕಿತ ಮಂಗನಕಾಯಿಲೆ ರೋಗದ ಲಕ್ಷಣಗಳು ಕಂಡುಬಂದರೆ ತಕ್ಷಣ ಮಾಹಿತಿ ನೀಡುವಂತೆ ಹಾಗೂ ಚಿಕಿತ್ಸೆ ಕೊಡಿಸುವಂತೆ ವೈದ್ಯಾಧಿಕಾರಿಗಳಿಗೆ ತಿಳಿಸಲಾಗಿದೆ. ಇದುವರೆಗೂ ಜಿಲ್ಲೆಯಲ್ಲಿ ಯಾರಲ್ಲೂ ಮಂಗನಕಾಯಿಲೆ ಸೋಂಕು ಪತ್ತೆಯಾಗಿಲ್ಲ ಎಂದು ತಿಳಿಸಿದರು.

21 ಮಂದಿಗೆ ಮಂಗನಕಾಯಿಲೆ ದೃಢ

ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿರುವ 59 ರೋಗಿಗಳ ಪೈಕಿ 21 ಮಂದಿಗೆ ಮಂಗನಕಾಯಿಲೆ ಇರುವುದು ದೃಢಪಟ್ಟಿದೆ. 34 ರೋಗಿಗಳಲ್ಲಿ ಸೋಂಕು ಪತ್ತೆಯಾಗಿಲ್ಲ. 33 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಆಸ್ಪತ್ರೆಯಲ್ಲಿ 26 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೆಎಂಸಿ ಆಸ್ಪತ್ರೆ ಸಿಬ್ಬಂದಿ ತಿಳಿಸಿದರು.

ಆಸ್ಪತ್ರೆಯಲ್ಲಿ ಇದುವರೆಗೂ ಮಂಗನಕಾಯಿಲೆಯಿಂದ ಯಾರೂ ಮೃತಪಟ್ಟಿಲ್ಲ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.