ADVERTISEMENT

ಕಾರ್ಗಲ್ ಸಮೀಪ ಮಂಗನ ಕಾಯಿಲೆಗೆ ಮತ್ತೊಂದು ಬಲಿ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2019, 23:56 IST
Last Updated 31 ಮಾರ್ಚ್ 2019, 23:56 IST
ಕಾರ್ಗಲ್ ಸಮೀಪದ ಅರಳಗೋಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭಾನುವಾರ ಭೇಟಿ ನೀಡಿದ ಕಾಂಗ್ರೆಸ್‌ ಮುಖಂಡ ಕಾಗೋಡು ತಿಮ್ಮಪ್ಪ ಗ್ರಾಮಸ್ಥರಲ್ಲಿ ಮಂಗನ ಕಾಯಿಲೆಯ ಸ್ಥಿತಿಗತಿಗಳ ಬಗ್ಗೆ ವಿಚಾರ ಮಾಡಿದರು
ಕಾರ್ಗಲ್ ಸಮೀಪದ ಅರಳಗೋಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭಾನುವಾರ ಭೇಟಿ ನೀಡಿದ ಕಾಂಗ್ರೆಸ್‌ ಮುಖಂಡ ಕಾಗೋಡು ತಿಮ್ಮಪ್ಪ ಗ್ರಾಮಸ್ಥರಲ್ಲಿ ಮಂಗನ ಕಾಯಿಲೆಯ ಸ್ಥಿತಿಗತಿಗಳ ಬಗ್ಗೆ ವಿಚಾರ ಮಾಡಿದರು   

ಕಾರ್ಗಲ್: ಇಲ್ಲಿಗೆ ಸಮೀಪದ ಅರಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಂಗನ ಕಾಯಿಲೆಗೆ ಭಾನುವಾರ ಮತ್ತೊಂದು ಬಲಿಯಾಗಿದೆ.

ಜೇಗಳ ನಿವಾಸಿ ಸಿದ್ಧಾರ್ಥ ಇಂದ್ರ ಜೈನ್ (70) ಮೃತಪಟ್ಟವರು. 20 ದಿನಗಳ ಹಿಂದೆ ಅರಳಗೋಡು ಆಸ್ಪತ್ರೆಯಲ್ಲಿ ಜ್ವರಕ್ಕೆ ಚಿಕಿತ್ಸೆ ಪಡೆದಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಭಾನುವಾರ ಮೃತಪಟ್ಟಿದ್ದಾರೆ.

ಕಾಂಗ್ರೆಸ್‌ ಮುಖಂಡ ಕಾಗೋಡು ತಿಮ್ಮಪ್ಪ ಮೃತರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಸರ್ಕಾರದಿಂದ ಪರಿಹಾರ ಒದಗಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು. ಮುಖಂಡರಾದ ಬಿ.ಆರ್. ಜಯಂತ್ ಜೊತೆಯಲ್ಲಿದ್ದರು.

ADVERTISEMENT

ಅರಳಗೋಡು ಸರ್ಕಾರಿ ಆಸ್ಪತ್ರೆ ಮತ್ತು ಜೇಗಳ ಗ್ರಾಮಕ್ಕೆ ಭೇಟಿ ನೀಡಿದ ಕಾಗೋಡು ತಿಮ್ಮಪ್ಪ ಈ ಭಾಗದ ನಿವಾಸಿಗಳ ಕುಂದು ಕೊರತೆಗಳನ್ನು ವಿಚಾರಿಸಿದರು. ಆಸ್ಪತ್ರೆಯಲ್ಲಿ ರೋಗಿಗಳಿಗೆ ದೊರೆಯುವ ಚಿಕಿತ್ಸಾ ವಿವರಗಳ ಜೊತೆಗೆ ಅರಣ್ಯ ಇಲಾಖೆ, ಕಂದಾಯ ಇಲಾಖೆ ರೋಗ ನಿಯಂತ್ರಣದಲ್ಲಿ ಕೈಗೊಳ್ಳುತ್ತಿರುವ ಕ್ರಮಗಳ ಬಗ್ಗೆ ವಿವರಣೆ ಪಡೆದುಕೊಂಡರು.

ಚುನಾವಣೆಯ ನಂತರ ಮುಖ್ಯಮಂತ್ರಿ ಜತೆ ಚರ್ಚೆ ನಡೆಸಿ, ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡಲು ಪ್ರಯತ್ನಿಸಲಾಗುವುದು ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.