ADVERTISEMENT

ಕುಂದಾಪುರದಲ್ಲಿ ಮತ್ತೆ 3 ಮಂಗಗಳ ಶವ ಪತ್ತೆ

ಇದುವರೆಗೂ ಜಿಲ್ಲೆಯಲ್ಲಿ ಮೃತಪಟ್ಟ ಮಂಗಗಳು 11; ಶಂಕಿತ ರೋಗಿ 1

​ಪ್ರಜಾವಾಣಿ ವಾರ್ತೆ
Published 11 ಜನವರಿ 2019, 13:54 IST
Last Updated 11 ಜನವರಿ 2019, 13:54 IST
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ   

ಉಡುಪಿ: ಕುಂದಾಪುರ ತಾಲ್ಲೂಕಿನ ಬೆಳ್ವೆ, ಹೊಸಂಗಡಿ, ಕಂಡ್ಲೂರು ಗ್ರಾಮಗಳಲ್ಲಿ ಶುಕ್ರವಾರ ಮತ್ತೆ ಮೂರು ಮಂಗಗಳ ಶವ ಪತ್ತೆಯಾಗಿದೆ. ಇದುವರೆಗೂ 11 ಮಂಗಗಳ ಶವ ಪತ್ತೆಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ದಿನೇದಿನೇ ಹೆಚ್ಚಾಗುತ್ತಿದೆ.

ಶಂಕಿತ ಪ್ರಕರಣ ಪತ್ತೆ:

ಕುಂದಾಪುರ ತಾಲ್ಲೂಕಿನ ಕೊಕ್ಕರ್ಣೆ ಗ್ರಾಮದಲ್ಲಿ ಜ್ವರ ಹಾಗೂ ಮೈಕೈ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರಿಗೆ ಮಂಗನ ಕಾಯಿಲೆ ಸೋಂಕು ತಗುಲಿರಬಹುದು ಎಂಬ ಅನುಮಾನದ ಮೇಲೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಮಂಗನ ಕಾಯಿಲೆ ಎಂದು ಇದುವರೆಗೂ ದೃಢಪಟ್ಟಿಲ್ಲ ಎಂದು ಡಿಎಚ್‌ಒ ಡಾ.ರೋಹಿಣಿ ‘ಪ್ರಜಾವಾಣಿ’ಗೆ ತಿಳಿಸಿದರು.‌

ADVERTISEMENT

ಮಂಗಗಳ ಶವಗಳನ್ನು ಶಿವಮೊಗ್ಗಕ್ಕೆ ಪರೀಕ್ಷೆಗೆ ಕಳುಹಿಸಲಾಗಿದೆ. ಇದುವರೆಗೂ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳು ವರದಿಯಾಗಿಲ್ಲ. ಕುಂದಾಪುರ ಹಾಗೂ ಕಾರ್ಕಳ ತಾಲ್ಲೂಕಿನಲ್ಲಿ ಮಂಗಗಳ ಶವಗಳು ಮಾತ್ರ ಪತ್ತೆಯಾಗಿವೆ. ಪ್ರಯೋಗಾಲಯದ ವರದಿ ಬಂದ ನಂತರ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ತಿಳಿಸಿದರು.

ಮತ್ತೊಂದೆಡೆ, ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 23 ರೋಗಿಗಳಲ್ಲಿ ಮಂಗನ ಕಾಯಿಲೆ ಸೋಂಕು ಇರುವುದು ದೃಢಪಟ್ಟಿದೆ. ಇವರೆಲ್ಲರೂ ಶಿವಮೊಗ್ಗ ಜಿಲ್ಲೆಯವರು. ಇದುವರೆಗೂ 63 ಮಂದಿ ಚಿಕಿತ್ಸೆಗೆ ದಾಖಲಾಗಿದ್ದು, 36 ಮಂದಿಯಲ್ಲಿ ಸೋಂಕು ಪತ್ತೆಯಾಗಿಲ್ಲ. ಅವರೆಲ್ಲರೂ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ. 4 ರೋಗಿಗಳ ಪರೀಕ್ಷಾ ವರದಿಗೆ ಕಾಯುತ್ತಿದ್ದೇವೆ ಎಂದು ಕೆಎಂಸಿ ವೈದ್ಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.