ಬೆಂಗಳೂರು: ‘ಮಂಕಿಪಾಕ್ಸ್ (ಮಂಗನ ಸಿಡುಬು) ಪ್ರಕರಣಗಳು ರಾಜ್ಯದಲ್ಲಿ ಈವರೆಗೂ ಪತ್ತೆಯಾಗಿಲ್ಲ. ವಿಮಾನ ನಿಲ್ದಾಣ ಹಾಗೂ ಬಂದರುಗಳಲ್ಲಿ 24 ಗಂಟೆಗಳೂ ಕಟ್ಟೆಚ್ಚರ ವಹಿಸಲಾಗಿದೆ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.
ವಿಶ್ವ ರಕ್ತನಾಳ ದಿನದ ಪ್ರಯುಕ್ತವ್ಯಾಸ್ಕ್ಯುಲರ್ ಸರ್ಜನ್ಸ್ ಅಸೋಸಿಯೇಶನ್ ನಗರದಲ್ಲಿ ಶನಿವಾರ ಹಮ್ಮಿಕೊಂಡ ಜಾಗೃತಿ ನಡಿಗೆಯಲ್ಲಿ ಭಾಗವಹಿಸಿ, ಮಾತನಾಡಿದರು. ‘ಮಂಕಿಪಾಕ್ಸ್ಗೆ ಸಂಬಂಧಿಸಿದಂತೆ ಆರಂಭದಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲಾಗುತ್ತಿದೆ. ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಆಸ್ಪತ್ರೆಗಳಲ್ಲೂ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಂತರರಾಷ್ಟ್ರೀಯ ಪ್ರಯಾಣಿಕರು ರಾಜ್ಯಕ್ಕೆ ಬಂದಾಗ ಮಾರ್ಗಸೂಚಿಯನ್ನು ಪಾಲಿಸಬೇಕು. ಇಥಿಯೋಪಿಯಾದಿಂದ ಬಂದಿದ್ದ ವ್ಯಕ್ತಿಯೊಬ್ಬರಿಗೆ ಮಂಕಿಪಾಕ್ಸ್ ಇರುವ ಅನುಮಾನದ ಮೇಲೆ ಪರೀಕ್ಷೆಗೆ ಒಳಪಡಿ
ಸಲಾಗಿತ್ತು. ಅವರಿಗೆ ಮಂಕಿಪಾಕ್ಸ್ ಇಲ್ಲ ಎನ್ನುವುದು ದೃಢಪಟ್ಟಿದೆ’ ಎಂದರು.
‘ವಿಮಾನ ನಿಲ್ದಾಣ ಹಾಗೂ ಬಂದರುಗಳಲ್ಲಿ ಕಟ್ಟೆಚ್ಚರ ವಹಿಸಲು ಮೂರು ಬಗೆಯ ಪಾಳಿಯನ್ನು ನಿಗದಿ ಮಾಡಲಾಗಿದೆ. ಸಿಡುಬು ಸೇರಿ ವಿವಿಧ ಲಕ್ಷಣಗಳಿಂದ ಈ ರೋಗ ಗುರುತಿಸಬಹುದಾಗಿದೆ. ಕೋವಿಡ್ನಂತೆಯೇ ಮೂರು ನಾಲ್ಕು ದಿನಗಳ ಬಳಿಕ ರೋಗ ಪತ್ತೆಯಾಗುತ್ತದೆ’ ಎಂದು ತಿಳಿಸಿದರು.
‘ದೇಶದಲ್ಲಿ ರಕ್ತನಾಳ ಶಸ್ತ್ರಚಿಕಿತ್ಸಾ ತಜ್ಞರು ಕಡಿಮೆ ಸಂಖ್ಯೆಯಲ್ಲಿ ಇದ್ದಾರೆ. ರಕ್ತನಾಳದ ಸಮಸ್ಯೆ ಬಗ್ಗೆ ನಗರ ಪ್ರದೇಶಗಳಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕು. ರಕ್ತನಾಳಸಮಸ್ಯೆಗಳು ಬೇರೆ ಅನಾರೋಗ್ಯಕ್ಕೂ ದಾರಿ ಮಾಡಿಕೊಡುತ್ತವೆ. ಸಂಚಾರ ಪೊಲೀಸರು ಸಾಮಾನ್ಯ ಜನರಿಗಿಂತ ಹೆಚ್ಚು ಕಾಲ ನಿಂತುಕೊಳ್ಳುತ್ತಾರೆ. ಹಾಗೆಯೇ, ಶಿಕ್ಷಕರು, ಶಸ್ತ್ರಚಿಕಿತ್ಸಕರು ಮತ್ತಿತರರು ಕೂಡ ಹೆಚ್ಚು ಸಮಯ ನಿಂತುಕೊಳ್ಳುತ್ತಾರೆ. ಇದರಿಂದಾಗಿ ರಕ್ತನಾಳದ ಸಮಸ್ಯೆ ಕಾಣಿಸಿಕೊಳ್ಳುತ್ತದೆ’ ಎಂದು ಹೇಳಿದರು.
‘ಜಗತ್ತಿನಲ್ಲಿ ಪ್ರತಿ 6 ಸೆಕೆಂಡ್ಗೆ ಒಬ್ಬ ವ್ಯಕ್ತಿ ಕಾಲನ್ನು ಕಳೆದುಕೊಳ್ಳುವ ಸ್ಥಿತಿಯಿದೆ ಎಂದು ಅಂದಾಜಿಸಲಾಗಿದೆ. ರಕ್ತನಾಳದ ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಬೇಕು. ಲಘು ವ್ಯಾಯಾಮವನ್ನು ಮಾಡುವಂತೆ ಎಲ್ಲರನ್ನೂ ಉತ್ತೇಜಿಸಬೇಕು’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.