ಬೆಂಗಳೂರು: ಸೋಮವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿರುವುದರಿಂದ ವಿಧಾನಸೌಧ ಮತ್ತು ವಿಕಾಸಸೌಧ ಕಟ್ಟಡಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಸಚಿವರು, ಶಾಸಕರು, ಅಧಿಕಾರಿಗಳು, ಸಿಬ್ಬಂದಿ ಮತ್ತು ಮಾಧ್ಯಮದವರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.
ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಸಚಿವರು ಮತ್ತು ಶಾಸಕರು ಒಬ್ಬ ಆಪ್ತ ಸಹಾಯಕರೊಂದಿಗೆ ಪ್ರವೇಶಿಸಬಹುದು. ಇಲಾಖಾ ಮುಖ್ಯಸ್ಥರು, ಕಾರ್ಯದರ್ಶಿ ಮತ್ತು ಅದಕ್ಕಿಂತ ಮೇಲಿನ ಹಂತದ ಅಧಿಕಾರಿಗಳಿಗೆ ಮಾತ್ರ ಈ ದ್ವಾರದಲ್ಲಿ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.
ಸಚಿವರು ಮತ್ತು ಶಾಸಕರ ಆಪ್ತ ಸಹಾಯಕರು ಬ್ಯಾಂಕ್ವೆಟ್ ಹಾಲ್ನಲ್ಲಿ ಕುಳಿತುಕೊಳ್ಳಬೇಕು. ಅಂಗರಕ್ಷಕ ಸಿಬ್ಬಂದಿ ವಿಕಾಸಸೌಧದ ಮೊದಲನೇ ಮಹಡಿಯಲ್ಲಿರುವ ಸಮಿತಿ ಕೊಠಡಿ ಮತ್ತು ನಾಲ್ಕನೇ ಮಹಡಿಯಲ್ಲಿರುವ ಸಮ್ಮೇಳನ ಕೊಠಡಿಯಲ್ಲಿ ಕುಳಿತುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ.
ವಿಧಾನಮಂಡಲ ಪ್ರವೇಶಿಸುವ ಪ್ರತಿಯೊಬ್ಬರೂ ಆರ್ಟಿ–ಪಿಸಿಆರ್ ಕೋವಿಡ್ ತಪಾಸಣಾ ನೆಗೆಟಿವ್ ವರದಿ ಹಾಜರುಪಡಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಕೋವಿಡ್ ಲಕ್ಷಣಗಳಿದ್ದರೆ ಪ್ರತ್ಯೇಕವಾಗಿರಬೇಕು ಮತ್ತು ತಕ್ಷಣವೇ ಪರೀಕ್ಷಿಸಿಕೊಳ್ಳಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.