ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದ 1.70 ಲಕ್ಷ ವಿದ್ಯಾರ್ಥಿಗಳಲ್ಲಿ 1.57 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ–2ಕ್ಕೆ ನೋಂದಾಯಿಸಿಕೊಂಡಿದ್ದಾರೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ‘ಪರೀಕ್ಷಾ ಶುಲ್ಕ ಇಲ್ಲದೇ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಿದ್ದರಿಂದ ಶೇ 92.4ರಷ್ಟು ವಿದ್ಯಾರ್ಥಿಗಳು ಏ.24 ರಿಂದ ಮೇ 8ರವರೆಗೆ ನಡೆಯುವ ಎರಡನೇ ಪರೀಕ್ಷೆ ತೆಗೆದುಕೊಂಡಿದ್ದಾರೆ. 70 ಸಾವಿರ ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗೆ ಹಾಜರಾಗುತ್ತಿದ್ದಾರೆ. ಸಿಇಟಿ ಫಲಿತಾಂಶಕ್ಕೂ ಮೊದಲು ಪರೀಕ್ಷೆ–2 ಫಲಿತಾಂಶ ನೀಡಲು ನಿರ್ಧರಿಸಿದ್ದೇವೆ. ಇದರಿಂದ ವಿವಿಧ ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಮೊದಲ ಸುತ್ತಿನಲ್ಲೇ ಅರ್ಹತೆ ಪಡೆಯಲು ಸಹಕಾರಿಯಾಗಲಿದೆ’ ಎಂದರು.
ಪರೀಕ್ಷೆ ಸಿದ್ಧತೆ ಕುರಿತು ವಿಡಿಯೊ ಸಂವಾದ: ದ್ವಿತೀಯ ಪಿಯು ಪರೀಕ್ಷೆ–2ರ ಸಿದ್ಧತೆ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳ ಸಮ್ಮುಖದಲ್ಲಿ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ವಿಡಿಯೊ ಸಂವಾದ ನಡೆಸಿದರು.
ಹಾಜರಾತಿ ಕೊರತೆಯ ಕಾರಣ ಪರೀಕ್ಷೆ-1ಕ್ಕೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳು ಪರೀಕ್ಷೆ-2 ಅಥವಾ ಪರೀಕ್ಷೆ-3 ತೆಗೆದುಕೊಳ್ಳಲು ಅವಕಾಶವಿದೆ. ಅಧಿಕಾರಿಗಳು, ಪೋಷಕರು, ಕಾಲೇಜು ಅಭಿವೃದ್ಧಿ ಸಮಿತಿಗಳು ಹೆಚ್ಚಿನ ಜವಾಬ್ದಾರಿ ನಿರ್ವಹಿಸಲು ತಿಳಿಸಬೇಕು. ವಲಸೆ ಕಾರ್ಮಿಕರ ಮಕ್ಕಳನ್ನು ಗುರುತಿಸಿ ಪರೀಕ್ಷೆ ಬರೆಯಲು ಪ್ರೇರೇಪಿಸಬೇಕು ಎಂದು ಸೂಚನೆ ನೀಡಿದರು.
ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಪದವಿ ಪೂರ್ವ ಶಿಕ್ಷಣ ನಿರ್ದೇಶಕಿ ಸಿಂಧೂ ರೂಪೇಶ್, ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧ್ಯಕ್ಷ ಎಚ್. ಬಸವರಾಜೇಂದ್ರ, ನಿರ್ದೇಶಕ ಎಚ್.ಎನ್. ಗೋಪಾಲಕೃಷ್ಣ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.