ಸಿದ್ದರಾಮಯ್ಯ
(ಸಂಗ್ರಹ ಚಿತ್ರ)
ಬೆಂಗಳೂರು: ‘ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ 4.30 ಕೋಟಿ ಫಲಾನುಭವಿಗಳ ಪೈಕಿ ಹೆಚ್ಚಿನವರು ಬಿಜೆಪಿಯವರು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ‘ವಾಮಮಾರ್ಗದಲ್ಲಿ ಮೂರೂವರೆ ವರ್ಷ ಅಧಿಕಾರ ನಡೆಸಿದ ಬಿಜೆಪಿ ಮಾಡಬಾರದ್ದನ್ನೆಲ್ಲಾ ಮಾಡಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿದೆ’ ಎಂದು ಆರೋಪಿಸಿದರು.
‘ವಿವಿಧ ಇಲಾಖೆಗಳಲ್ಲಿ ಸುಮಾರು ₹ 40 ಕೋಟಿಗೂ ಹೆಚ್ಚು ಮೊತ್ತದ ಬಿಲ್ಗಳನ್ನು ಬಿಜೆಪಿಯವರು ಬಾಕಿ ಉಳಿಸಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳನ್ನು ಅಣಕಿಸಿ ಈಗ ನಮ್ಮ ಗ್ಯಾರಂಟಿಗಳನ್ನೇ ಕಾಪಿ ಮಾಡಿ ಅದಕ್ಕೆ ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ. ಬಿಜೆಪಿಯವರು ಅಷ್ಟು ನಿರ್ಲಜ್ಜರಾಗಿದ್ದಾರೆ’ ಎಂದು ಟೀಕಿಸಿದರು.
‘ಜನಾದೇಶದ ಸರ್ಕಾರವನ್ನು ಉರುಳಿಸಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿಯವರಿಗೆ ಹಣ ತಿನ್ನುವ ರುಚಿ ಹತ್ತಿದೆ. ಹೀಗಾಗಿ, ಮತ್ತೆ ಮತ್ತೆ ಸರ್ಕಾರ ಬೀಳಿಸುವ ಪ್ರಯತ್ನಕ್ಕೆ ಕೈ ಹಾಕುತ್ತಲೇ ಇರುತ್ತಾರೆ’ ಎಂದು ಪಕ್ಷದ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ ಅವರು, ‘ಸರ್ಕಾರದ ಕೆಲಸಗಳನ್ನು ಪ್ರತಿ ಮನೆಗೆ ತಲುಪಿಸಬೇಕು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರ ಸುಳ್ಳನ್ನು ಸೋಲಿಸಿ ನಮ್ಮ ಸಾಧನೆಗಳನ್ನು ಎತ್ತಿ ಹಿಡಿಯುವ ಮೂಲಕ 28 ಲೋಕಸಭಾ ಸ್ಥಾನಗಳಲ್ಲಿ ಗೆಲ್ಲಿಸಬೇಕು’ ಎಂದೂ ಕರೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.