ADVERTISEMENT

ಬಾಣಂತಿಯರು, ನವಜಾತ ಶಿಶುಗಳ ಸಾವು: ಎನ್ಎಚ್‌ಆರ್‌ಸಿಗೆ ಪತ್ರ ಬರೆಯುವೆ– ಬಿವೈವಿ

ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

​ಪ್ರಜಾವಾಣಿ ವಾರ್ತೆ
Published 4 ಜನವರಿ 2025, 10:19 IST
Last Updated 4 ಜನವರಿ 2025, 10:19 IST
ಬಿ.ವೈ.ವಿಜಯೇಂದ್ರ 
ಬಿ.ವೈ.ವಿಜಯೇಂದ್ರ    

ಶಿವಮೊಗ್ಗ: ರಾಜ್ಯದಲ್ಲಿ ಬಾಣಂತಿಯರ ಮತ್ತು ನವಜಾತ ಶಿವುಗಳ ಸಾವಿನ ಕುರಿತಂತೆ ಕೇಂದ್ರ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಬಾಣಂತಿಯರ ಮತ್ತು ನವಜಾತ ಶಿಶುಗಳ ಸಾವು ಖಂಡಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದಿಂದ ಶನಿವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರಾಜ್ಯದ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಕಳೆದ 6 ತಿಂಗಳಲ್ಲಿ 600ಕ್ಕೂಅಧಿಕ ಬಾಣಂತಿಯರು ಮತ್ತು 1 ಸಾವಿರಕ್ಕೂ ಅಧಿಕ ನವಜಾತ ಶಿಶು ಮರಣ ಹೊಂದಿದ್ದಾರೆ. ಸರ್ಕಾರ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಆತ್ಮಹತ್ಯೆ ಭಾಗ್ಯ ಕಲ್ಪಿಸಿದೆ. ಇದು ದುಷ್ಟ ಸರ್ಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಬಾಣಂತಿಯರ ಮತ್ತು ಕಂದಮ್ಮಗಳ ಸಾವಿನ ಶಾಪ ಸರ್ಕಾರಕ್ಕೆ ತಟ್ಟುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಳ್ಳೆಯದು ಆಗೊಲ್ಲ. ಇಷ್ಟೊಂದು ಸಾವು ನೋವು ರಾಜ್ಯದಲ್ಲಿ ಎಂದೂ ಸಂಭವಿಸಿಲ್ಲ. ಇಂತಹ ಲಜ್ಜೆಗೆಟ್ಟ ಮತ್ತು ನಾಚಿಕೆಗೆಟ್ಟ ಸರ್ಕಾರವನ್ನು ನೋಡಿಲ್ಲ. ಬೇಜವಾಬ್ದಾರಿತನ ತೋರುತ್ತಿರುವ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರನ್ನು ಸಚಿವ ಸಂಪುಟದಿಂದ ಸಿಎಂ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಸಿಎಂ ಸಿದ್ದರಾಮಯ್ಯ ಅವರಿಗೆ ಮನುಷ್ಯತ್ವ ಇದ್ದರೆ ಮೃತ ಬಾಣಯಂತಿಯರ ಕುಟುಂಬಕ್ಕೆ ತಲಾ ₹ 25 ಲಕ್ಷ ಪರಿಹಾರ ತಕ್ಷಣ ಘೋಷಣೆ ಮಾಡಬೇಕು. ಅನಾಥವಾಗಿರುವ ಮಕ್ಕಳನ್ನು ಸರ್ಕಾರ ದತ್ತು ತೆಗದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯಕ್ಕೆ ಗ್ರಹಣ ಹಿಡಿದಿದೆ. ಅಭಿವೃದ್ಧಿ ನಡೆಯುತ್ತಿಲ್ಲ. 5 ಗ್ಯಾರಂಟಿಗಳಿಂದಾಗಿ ಜನರು ನೆಮ್ಮದಿಯಲ್ಲಿ ಇದ್ದಾರೆ ಎಂಬ ಭ್ರಮೆಯಲ್ಲಿ ಸಿಎಂ ಇದ್ದಾರೆ. ಆರ್ಥಿಕ ಪರಿಸ್ಥಿತಿ ಕುರಿತಂತೆ ಸಿಎಂ ಅವರು ಶ್ವೇತ ಪತ್ರ ಹೊರಡಿಸಲಿ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.