ADVERTISEMENT

ತಾಯಿಯ ಎದೆಹಾಲೇ ಶ್ರೇಷ್ಠ: ಆರೋಗ್ಯ ಇಲಾಖೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2022, 21:15 IST
Last Updated 2 ಆಗಸ್ಟ್ 2022, 21:15 IST
   

ಬೆಂಗಳೂರು:‘ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ತಾಯಿಯ ಎದೆಹಾಲು ಸಹಕಾರಿ. ಇದರಿಂದ ರೋಗ ನಿರೋಧಕ ಶಕ್ತಿ ಮಗುವಿನಲ್ಲಿ ಹೆಚ್ಚಳವಾಗಲಿದೆ’ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇಲಾಖೆ ಹಮ್ಮಿಕೊಂಡಿರುವಸ್ತನ್ಯಪಾನಸಪ್ತಾಹಕ್ಕೆ ಚಾಲನೆ ದೊರೆತಿದ್ದು, ವಿವಿಧಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ‘ತಾಯಿಯ ಎದೆಹಾಲಿನಲ್ಲಿ ಮಗುವಿನ ಬೆಳವಣಿಗೆಗೆ ಬೇಕಾದ ಪೌಷ್ಟಿಕತೆ, ಖನಿಜಾಂಶ ಮತ್ತು ಹೇರಳವಾದ ನೀರಿನ ಅಂಶಗಳು ಅಡಕವಾಗಿವೆ‌. ಮಗುವಿಗೆ ಇದು ಮೊದಲ ಲಸಿಕೆಯಾಗಲಿದೆ. ಮೊದಲ ಮೂರು ದಿನದ ಹಾಲಿನಲ್ಲಿ ಹೆಚ್ಚು ರೋಗನಿರೋಧಕಗಳಿರಲಿದ್ದು, ಮಗುವಿನಲ್ಲಿ ರೋಗ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅದೇ ರೀತಿ, ಸೋಂಕುಗಳಿಂದ ರಕ್ಷಣೆ ನೀಡುತ್ತದೆ. ಜನಿಸಿದ ಒಂದು ಗಂಟೆಯೊಳಗೆ ಹಾಲುಣಿಸಲು ಪ್ರಾರಂಭಿಸಿ, ಆರು ತಿಂಗಳವರೆಗೆ ಎದೆಹಾಲನ್ನು ಮಾತ್ರ ನೀಡಬೇಕು’ ಎಂದು ತಿಳಿಸಲಾಗಿದೆ.

‘ಸ್ತನ್ಯಪಾನದಿಂದ ಶಿಶು ಮರಣ ತಪ್ಪಿಸಲು ಸಾಧ್ಯವಾಗುತ್ತದೆ. ತಾಯಿಯ ಎದೆಹಾಲಿನಷ್ಟು ಪೋಷಕಾಂಶ ಭರಿತ ಆಹಾರ ಭೂಮಿಯ ಮೇಲೆ ಬೇರೆ ಇಲ್ಲ. ಇದನ್ನು ಕೃತಕವಾಗಿ ಸೃಷ್ಟಿಸಲು ಸಾಧ್ಯವಿಲ್ಲ. ಮಗುವಿಗೆ ನೀಡುವ ಚುಚ್ಚುಮದ್ದಿಗಿಂತ ಇದು ಹೆಚ್ಚು ಶಕ್ತಿಶಾಲಿ’ ಎಂದು ಹೇಳಲಾಗಿದೆ.

ADVERTISEMENT

‘ಸ್ತನ್ಯಪಾನ ಮಕ್ಕಳ ಮೇಲೆ ಹೆಚ್ಚಿನ ಸಕಾರಾತ್ಮ ಪರಿಣಾಮ ಬೀರಲಿದ್ದು, ತಾಯಿ ಮತ್ತು ಮಗುವಿನ ನಡುವಿನ ಬಾಂಧವ್ಯ ಬಲಗೊಳ್ಳಲು ಸಹಕಾರಿ.ಸಾಂಕ್ರಾಮಿಕ ರೋಗಗಳಿಂದ ಮಕ್ಕಳನ್ನು ರಕ್ಷಿಸಲು ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ತಾಯಂದಿರು ನವಜಾತ ಶಿಶುಗಳಿಗೆ ಸ್ತನ್ಯಪಾನ ಮಾಡಿಸಬೇಕು. ಮಗುವನ್ನು ಸ್ಪರ್ಶಿಸುವ ಮೊದಲು ಸ್ವಚ್ಛತೆಯನ್ನು ಖಚಿತಪಡಿಸಿಕೊಳ್ಳಬೇಕು. ಗುಂಪುಗಳಿಂದ ದೂರವಿರಬೇಕು’ ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.