ADVERTISEMENT

ಶರಾವತಿ ಸಂತ್ರಸ್ತರ ಸಮಸ್ಯೆ: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಬಿ.ವೈ.ರಾಘವೇಂದ್ರ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2024, 9:45 IST
Last Updated 11 ಡಿಸೆಂಬರ್ 2024, 9:45 IST
ಬಿ.ವೈ. ರಾಘವೇಂದ್ರ
ಬಿ.ವೈ. ರಾಘವೇಂದ್ರ   

ನವದೆಹಲಿ: ‌ಶರಾವತಿ ಜಲವಿದ್ಯುತ್‌ ಯೋಜನೆಯ ಸಂ‌ತ್ರಸ್ತರಿಗೆ ನ್ಯಾಯ ಒದಗಿಸಲು ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಆಗ್ರಹಿಸಿದರು. 

ಸಂತ್ರಸ್ತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಲೋಕಸಭೆಯಲ್ಲಿ ಬುಧವಾರ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ಅವರು, ‘ಈ ಜಲ ವಿದ್ಯುತ್‌ ಯೋಜನೆ 1958–1964ರ ನಡುವೆ ನಿರ್ಮಾಣವಾಗಿತ್ತು. ಯೋಜನೆಗಾಗಿ ಸಾವಿರಾರು ಎಕರೆ ಭೂಸ್ವಾಧೀನ ಮಾಡಲಾಗಿತ್ತು.  ನಾಲ್ಕೈದು ಸಾವಿರ ಕುಟುಂಬಗಳ ಜಾಗ ಮುಳುಗಡೆ ಆಗಿದೆ. ಈ ಯೋಜನೆಯಿಂದ ಇಡೀ ದೇಶಕ್ಕೆ ವಿದ್ಯುತ್ ಸಿಕ್ಕಿದೆ. ಆದರೆ, ಸಂತ್ರಸ್ತರು ಈಗಲೂ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ’ ಎಂದು ಗಮನ ಸೆಳೆದರು. 

‘ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ಬರುವ ಮುನ್ನ ರೈತರಿಗೆ ಭೂಮಿ ಕೊಡುವ ಪ್ರಯತ್ನವನ್ನು ಹಿಂದಿನ ಸರ್ಕಾರಗಳು ಮಾಡಿಲ್ಲ. ಇಲ್ಲಿನ ಜನರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸವಲತ್ತುಗಳು ಸಿಗುತ್ತಿಲ್ಲ. ಸ್ವಂತ ಮನೆ ಕಟ್ಟಲು ಆಗುತ್ತಿಲ್ಲ. ಬ್ಯಾಂಕ್ ಸಾಲ ಸಿಗುತ್ತಿಲ್ಲ. 

ADVERTISEMENT

ಸಂತ್ರಸ್ತರಿಗೆ ಪುನವರ್ಸತಿ ಕಲ್ಪಿಸಲು 9,136 ಎಕರೆ ಅರಣ್ಯ ಪ್ರದೇಶವನ್ನು ಬಳಸುವ ಪ್ರಸ್ತಾವನೆಯನ್ನು ಹಿಂದಿನ ಸರ್ಕಾರ ಕಳುಹಿಸಿತ್ತು. ಈ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದೆ. ನ್ಯಾಯಾಲಯಕ್ಕೆ ಕೇಂದ್ರ ಸರ್ಕಾರ ಪ್ರಮಾಣಪತ್ರ ಸಲ್ಲಿಸಿದೆ. ಈ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸುವುದಾಗಿ ಎರಡೂ ಸರ್ಕಾರಗಳು ಡಿಸೆಂಬರ್ 3ರಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿವೆ. ಮುಂದಿನ ವಿಚಾರಣೆ ಜನವರಿ 20ರಂದು ನಿಗದಿಯಾಗಿದೆ. ಕೇಂದ್ರ ಅರಣ್ಯ ಸಚಿವರು ಹೆಚ್ಚಿನ ಆಸ್ಥೆ ವಹಿಸಿ ಮಧ್ಯಪ್ರವೇಶಿಸಿ ರೈತರಿಗೆ ನ್ಯಾಯ ಕೊಡಿಸಬೇಕು’ ಎಂದು ಅವರು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.