ADVERTISEMENT

ರೋಹಿತ್‌ ಚಕ್ರತೀರ್ಥ ವಜಾಗೊಳಿಸಿ: ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್‌ ಆಗ್ರಹ

​ಪ್ರಜಾವಾಣಿ ವಾರ್ತೆ
Published 1 ಜೂನ್ 2022, 19:30 IST
Last Updated 1 ಜೂನ್ 2022, 19:30 IST
ಜಿ.ಸಿ. ಚಂದ್ರಶೇಖರ್‌
ಜಿ.ಸಿ. ಚಂದ್ರಶೇಖರ್‌   

ಬೆಂಗಳೂರು: ರಾಷ್ಟ್ರಕವಿ ಕುವೆಂಪು, ಬಸವಣ್ಣ, ನಾಡಗೀತೆ, ನಾಡಧ್ವಜವನ್ನು ಅವಮಾನಿಸಿರುವ ರೋಹಿತ್‌ ಚಕ್ರತೀರ್ಥ ಅವರನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ಸ್ಥಾನದಿಂದ ತಕ್ಷಣ ವಜಾಗೊಳಿಸಬೇಕು ಎಂದು ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್‌ ಆಗ್ರಹಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರೋಹಿತ್‌ ಚಕ್ರತೀರ್ಥ ಕೊಳಕು ಮನಸ್ಥಿತಿಯ ವ್ಯಕ್ತಿ. ಅವರನ್ನು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದು ದುರ್ದೈವ. ಇನ್ನಾದರೂ ತಡಮಾಡದೇ ಸಮಿತಿಯ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಬೇಕು. ಒಂದು ವಾರದೊಳಗೆ ಸರ್ಕಾರ ನಿರ್ಧಾರ ಪ್ರಕಟಿಸದಿದ್ದರೆ ಕಾಂಗ್ರೆಸ್‌ ಪಕ್ಷದಿಂದ ಬೃಹತ್‌ ಹೋರಾಟ ನಡೆಸಲಾಗುವುದು’ ಎಂದರು.

ಸಮಿತಿಯ ಅಧ್ಯಕ್ಷ ಸ್ಥಾನದಲ್ಲಿರುವ ವ್ಯಕ್ತಿಗೆ ಈ ನಾಡಿನ ಮಹಾಪುರುಷರು, ಸಾಹಿತಿಗಳು, ಭಾಷೆ ಮತ್ತು ನಾಡಧ್ವಜದ ಬಗ್ಗೆ ಗೌರವವೇ ಇಲ್ಲ. ಒಂದು ವರ್ಗಕ್ಕೆ ಸೇರಿದವರನ್ನು ಮಾತ್ರವೇ ಪಠ್ಯಪುಸ್ತಕ ಪರಿಷ್ಕರಣ ಸಮಿತಿ ಸದಸ್ಯರನ್ನಾಗಿ ನೇಮಿಸಲಾಗಿತ್ತು. ಇಂತಹ ಸಮಿತಿಯು ನೀಡುವ ಪಠ್ಯವನ್ನು ಮಕ್ಕಳಿಗೆ ಬೋಧಿಸಬಾರದು. ಹಿಂದಿನ ಪಠ್ಯಕ್ರಮವನ್ನೇ ಮುಂದುವರಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

‘ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಸಮಿತಿಯ ಬೆಂಬಲಕ್ಕೆ ನಿಂತಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌, ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಅವರು ಸಚಿವರಾಗಿರಲು ಸಮರ್ಥರಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವಿಷಯದಲ್ಲಿ ತಕ್ಷಣ ಮಧ್ಯಪ್ರವೇಶ ಮಾಡಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.