ನವದೆಹಲಿ: ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಗರಣದಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರನ್ನು ದೋಷಮುಕ್ತರನ್ನಾಗಿಸಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.
‘ಪ್ರಾಧಿಕಾರವು 107 ನಿವೇಶನಗಳನ್ನು ನಿಯಮಬಾಹಿರವಾಗಿ ಹಂಚಿಕೆ ಮಾಡಿದೆ’ ಎಂದು ಸಾಮಾಜಿಕ ಹೋರಾಟಗಾರ ಕೆ.ಆರ್.ರವೀಂದ್ರ ಹಾಗೂ ಕೆಪಿಸಿಸಿ ಸದಸ್ಯ ಟಿ.ಎಸ್.ಸತ್ಯಾನಂದ ಆರೋಪಿಸಿದ್ದರು. 2011ರ ಅ.17ರಂದು ಈ ಹಗರಣ ಬೆಳಕಿಗೆ ಬಂದಿತ್ತು. ಸರ್ಕಾರ ಇದನ್ನು ಸಿಬಿಐ ತನಿಖೆಗೆ ವಹಿಸಿತ್ತು.
‘ಪುಟ್ಟರಾಜು ಅವರ ಪತ್ನಿ ಈ ಮೊದಲೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಪಡೆದಿದ್ದರು. ಇದನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣ ಪತ್ರ ಸಲ್ಲಿಸಿ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದಿಂದಲೂ ನಿವೇಶನ ಪಡೆದಿದ್ದಾರೆ’ ಎಂದು ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿತ್ತು.
ಪ್ರಕರಣದಿಂದ ಕೈಬಿಡುವಂತೆ ಕೋರಿ ಪುಟ್ಟರಾಜು ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ವಜಾ ಮಾಡಿತ್ತು. ಇದನ್ನು ಪ್ರಶ್ನಿಸಿ ಪುಟ್ಟರಾಜು ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ.ಎಂ.ಸುಂದರೇಶ್ ಹಾಗೂ ಕೋಟೀಶ್ವರ್ ಸಿಂಗ್ ಪೀಠವು ಅರ್ಜಿ ವಜಾ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.