ಬೆಂಗಳೂರು: ‘ಮುಡಾ ನಿವೇಶನ ಅಕ್ರಮ ಹಂಚಿಕೆಗೆ ಸಂಬಂಧಿಸಿದಂತೆ ನಿಮ್ಮ ವಿರುದ್ಧ ದಾಖಲಾಗಿರುವ ದೂರಿನ ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಅನುಮತಿ ಏಕೆ ನೀಡಬಾರದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿರುವ ಶೋಕಾಸ್ ನೋಟಿಸ್ನಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಕೇಳಿದ್ದಾರೆ.
ಮುಖ್ಯಮಂತ್ರಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅನುಮತಿ ನೀಡಿ ಎಂದು ವಕೀಲ ಟಿ.ಜೆ.ಅಬ್ರಹಾಂ ಅವರು ಸಲ್ಲಿಸಿದ್ದ ಮನವಿಯ ಆಧಾರದಲ್ಲಿ ಸಿದ್ದರಾಮಯ್ಯ ಅವರಿಗೆ ಕಾರಣ ಕೇಳಿ ಇದೇ26 ರಂದು ರಾಜ್ಯಪಾಲ ನೋಟಿಸ್ ಜಾರಿ ಮಾಡಿದ್ದರು.
‘ಅಬ್ರಹಾಂ ಅವರ ಮನವಿಯನ್ನು ಕೂಲಂಕಶವಾಗಿ ಪರಿಶೀಲಿಸಲಾಗಿದೆ. ನಿಮ್ಮ ಮೇಲಿನ ಆರೋಪಗಳು ಗಂಭೀರ ಸ್ವರೂಪದವು ಮತ್ತು ಆ ಆರೋಪಗಳು ನಿಜ ಎಂಬುದು ಮೇಲ್ನೋಟಕ್ಕೆ ಸಾಬೀತಾಗುತ್ತದೆ. ಹೀಗಾಗಿ ನಿಮ್ಮ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ಬಂದಿರುವ ಮನವಿಯ ಆಧಾರದಲ್ಲಿ ನೋಟಿಸ್ ನೀಡಲಾಗುತ್ತಿದೆ’ ಎಂದು ವಿವರಿಸಿದ್ದಾರೆ.
‘ಅನುಮತಿ ಏಕೆ ನೀಡಬಾರದು ಎಂಬುದಕ್ಕೆ ಏಳು ದಿನಗಳ ಒಳಗೆ ಉತ್ತರ ನೀಡಿ. ನಿಮ್ಮ ಉತ್ತರವನ್ನು ಪುಷ್ಟೀಕರಿಸುವ ದಾಖಲೆಗಳನ್ನು ಸಲ್ಲಿಸಿ’ ಎಂದು ರಾಜ್ಯಪಾಲ ನೋಟಿಸ್ನಲ್ಲಿ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.