ಬೆಂಗಳೂರು: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪ ಪ್ರಕರಣದ ಲೋಕಾಯುಕ್ತ ತನಿಖಾಧಿಕಾರಿ ಬದಲಾಯಿಸಲು ನಿರ್ದೇಶಿಸಬೇಕು’ ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.
ಈ ಸಂಬಂಧ ಸಿಆರ್ಪಿಸಿ ಕಲಂ 156(3)ರ ಅಡಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ತಿರಸ್ಕರಿಸಿ ಗುರುವಾರ ಆದೇಶಿಸಿದರು.
ಇದೇ ವೇಳೆ ನ್ಯಾಯಾಧೀಶರು, ‘ಸಮಗ್ರ ವರದಿ ಸಲ್ಲಿಸಲು ಹೆಚ್ಚಿನ ಸಮಯ ಕೋರದೆ ಇಂದಿನಿಂದ 2 ತಿಂಗಳ ಒಳಗಾಗಿ ತನಿಖೆಯನ್ನು ಪೂರ್ಣಗೊಳಿಸಿ’ ಎಂದು ಲೋಕಾಯುಕ್ತಕ್ಕೆ ನಿರ್ದೇಶಿಸಿ ವಿಚಾರಣೆಯನ್ನು ನವೆಂಬರ್ 15ಕ್ಕೆ ಮುಂದೂಡಿದರು. ಲೋಕಾಯುಕ್ತ ಪರ ವಿಶೇಷ ಪ್ರಾಸಿಕ್ಯೂಟರ್ ವೆಂಕಟೇಶ್ ಅರಬಟ್ಟಿ ಹಾಗೂ ಜಾರಿ ನಿರ್ದೇಶನಾಲಯದ ಪರ ಮಧುಕರ ದೇಶಪಾಂಡೆ ಹಾಜರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.