ಗೃಹ ಸಚಿವ ಜಿ. ಪರಮೇಶ್ವರ
ಬೆಂಗಳೂರು: ‘ಮುಡಾ ನಿವೇಶನ ಅಕ್ರಮ ಹಂಚಿಕೆ ಬಗ್ಗೆ ಸಾರ್ವಜನಿಕವಾಗಿ ಹೇಳಿಕೆಗಳನ್ನು ನೀಡಿ ಗೊಂದಲ ಸೃಷ್ಟಿಸುವ ಬದಲು, ಈ ಪ್ರಕರಣದ ವಿಚಾರಣೆಗೆ ರಾಜ್ಯ ಸರ್ಕಾರ ನಿವೃತ್ತ ನ್ಯಾಯಮೂರ್ತಿ ಪಿ.ಎಸ್. ದೇಸಾಯಿ ನೇತೃತ್ವದಲ್ಲಿ ರಚಿಸಿರುವ ಏಕ ಸದಸ್ಯ ವಿಚಾರಣಾ ಆಯೋಗಕ್ಕೆ ಮಾಹಿತಿ ನೀಡಲಿ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿರೋಧ ಪಕ್ಷದವರು ಪದೇ ಪದೇ ಅನೇಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರ ಬಳಿ ಮಾಹಿತಿ ಇದ್ದರೆ ಆಯೋಗಕ್ಕೆ ನೀಡಲಿ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸುವುದಿಲ್ಲ’ ಎಂದರು.
‘ಕೋವಿಡ್ ಸಂದರ್ಭದಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಮೈಕಲ್ ಡಿಕುನ್ಹಾ ಅವರು ತಮ್ಮ ವರದಿಯಲ್ಲಿ ಏನು ಶಿಫಾರಸು ಮಾಡುತ್ತಾರೆ ಎಂಬುದನ್ನು ಗಮನಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಅಪರಾಧ ಪ್ರಕರಣ ದಾಖಲಿಸಬೇಕು ಎಂದು ವರದಿಯಲ್ಲಿ ಬಂದರೆ, ಅದರಂತೆ ಕ್ರಮ ಕೈಗೊಳ್ಳಲಾಗುವುದು’ ಎಂದರು.
‘ರಾಜ್ಯಪಾಲರು ರಕ್ಷಣೆ ಕೇಳಿದ ಹಿನ್ನೆಲೆಯಲ್ಲಿ ಅವರಿಗೆ ಭದ್ರತೆ ಒದಗಿಸಲಾಗಿದೆ. ಅವರಿಗೆ ಯಾವ ರೀತಿಯ ಬೆದರಿಕೆ ಇದೆ ಎಂಬುದು ನನ್ನ ಗಮನಕ್ಕೆ ಬಂದಿಲ್ಲ. ರಾಜ್ಯಪಾಲರಿಗೆ ಬೆದರಿಕೆ ಇದೆ ಎಂಬ ಸನ್ನಿವೇಶವನ್ನು ಬಿಜೆಪಿಯವರು ಸೃಷ್ಟಿಸಿದ್ದಾರೆ. ಬಿಜೆಪಿಯವರ ಇತ್ತೀಚಿನ ನಡವಳಿಕೆಗಳೇ ಇದಕ್ಕೆ ಕಾರಣ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.