ಬೆಂಗಳೂರು: ‘ಪುರಸಭೆಗಳ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸುವ ಮುನ್ನ ಸರ್ಕಾರ ಆ ಸಂಸ್ಥೆಗಳಿಗೆ ಯಾವ್ಯಾವ ವರ್ಗದ ಪ್ರತಿನಿಧಿಗಳು ಆಯ್ಕೆಯಾಗಿದ್ದಾರೆ ಎಂಬ ಯಥೋಚಿತ ಮಾಹಿತಿ ಸಂಗ್ರಹಿಸಲು ಸಾಫ್ಟ್ವೇರ್ ದತ್ತಾಂಶ ಬಳಸಿಕೊಳ್ಳಬೇಕು ಮತ್ತು ಆ ನಂತರವೇ ಸ್ಥಾನಗಳ ಮೀಸಲು ಅಖೈರುಗೊಳಿಸಬೇಕು’ ಎಂದು ಹೈಕೋರ್ಟ್ ಆದೇಶಿಸಿದೆ.
‘ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮತ್ತು ಧಾರವಾಡ ಜಿಲ್ಲೆಯ ಅಣ್ಣಿಗೇರಿ ಸೇರಿದಂತೆ ಐದು ಪಟ್ಟಣ ಪಂಚಾಯಿತಿಗಳಲ್ಲಿ ಎಸ್ಸಿ, ಎಸ್ಟಿ ಮೀಸಲು ವರ್ಗದ ಅಡಿಯಲ್ಲಿ ಯಾವುದೇ ಮಹಿಳಾ ಸದಸ್ಯರು ಆಯ್ಕೆಯಾಗಿಲ್ಲ’ ಎಂದು ಆಕ್ಷೇಪಿಸಲಾದ ಐದು ರಿಟ್ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.
‘ಪುರಸಭೆಗಳಿಗೆ ಆಯ್ಕೆಯಾದ ವ್ಯಕ್ತಿಗಳಿಗೆ ಸಂಬಂಧಿಸಿದ ಸಾಫ್ಟ್ವೇರ್ ದತ್ತಾಂಶವನ್ನು ಸಂಗ್ರಹಿಸಬೇಕು ಮತ್ತು ನಿರ್ದಿಷ್ಟ ವರ್ಗಕ್ಕೆ ಸೇರಿದ ಅಭ್ಯರ್ಥಿಗಳ ಉಪಸ್ಥಿತಿಯನ್ನು ಪರಿಗಣಿಸಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲು ಪಟ್ಟಿ ಅಂತಿಮಗೊಳಿಸಬೇಕು’ ಎಂದು ನ್ಯಾಯಪೀಠ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
‘ಹಾಲಿ ನಿಗದಿಪಡಿಸಿರುವ ಅವಧಿ ಮುಗಿಯುವವರೆಗೆ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳನ್ನು ಖಾಲಿ ಬಿಡಬೇಕು’ ಎಂಬ ಅರ್ಜಿದಾರರ ವಾದವನ್ನು ತಳ್ಳಿಹಾಕಿರುವ ನ್ಯಾಯಪೀಠ, ‘ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳನ್ನು ಖಾಲಿ ಬಿಟ್ಟರೆ ಸಂಸ್ಥೆಗಳ ಆಡಳಿತ ನಿರ್ವಹಣೆಗೆ ತೊಂದರೆ ಆಗುತ್ತದೆ. ಹಾಗಾಗಿ, ಸರ್ಕಾರ ಆ ಹುದ್ದೆಗಳ ಮೀಸಲು ಮುಕ್ತವಾಗಿ ಇರಿಸಿ ಚುನಾವಣೆ ನಡೆಸಬಹುದು’ ಎಂದು ಆದೇಶಿಸಿದೆ.
‘ಚುನಾಯಿತ ಪುರಸಭೆ ಪ್ರತಿನಿಧಿಗಳ ದತ್ತಾಂಶ ಸಂಗ್ರಹಿಸಿ ಮೀಸಲಾತಿ ಪಟ್ಟಿ ಮಾಡಿದರೆ ಮತ್ತು ಮೀಸಲು ವರ್ಗಕ್ಕೆ ಯಾವುದೇ ಅಭ್ಯರ್ಥಿ ಕಂಡುಬಂದಿಲ್ಲ ಎಂದಾದರೆ, ಅದಕ್ಕೆ ಅನುಗುಣವಾಗಿ ಸೂಕ್ತ ಬದಲಾವಣೆ ಮಾಡಬಹುದು’ ಎಂದೂ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.