ಧಾರವಾಡ: ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಬಂಧನಕ್ಕೊಳಗಾದ 6 ಆರೋಪಿಗಳನ್ನು ಇದೇ 7ರವರೆಗೆ ಸಿಬಿಐ ವಶಕ್ಕೆ ನೀಡಿ ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯ ಆದೇಶಿಸಿದೆ.
ಭಾನುವಾರ ರಾತ್ರಿ ಆರೋಪಿಗಳನ್ನು ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರ ಸೂಚನೆಯಂತೆ ಸೋಮವಾರ ಬೆಳಿಗ್ಗೆ ಆರೋಪಿಗಳಾದ ದಿನೇಶ, ಅಶ್ವತ್ಥ, ಸುನೀಲಕುಮಾರ್, ನಾಜೀರ್ ಅಹ್ಮದ್, ಶಾ ನವಾಜ್ ಮತ್ತು ನೂತನ್ ಅವರನ್ನು ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಕರೆ ತರಲಾಯಿತು. ಮಧ್ಯಾಹ್ನ 12 ರ ಸುಮಾರಿಗೆ ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು. ತೆರದ ನ್ಯಾಯಾಲಯದಲ್ಲೇ ಆರೋಪಿಗಳಿಂದ ವಕಾಲತ್ಗೆ ಸಹಿ ಪಡೆದ ವಕೀಲರು ಅವರ ಪರವಾಗಿ ವಕಾಲತ್ ಸಲ್ಲಿಸಿದರು.
‘ಆರೋಪಿಗಳ ಹೆಚ್ಚಿನ ವಿಚಾರಣೆ ಅಗತ್ವವಿದೆ ಎನ್ನುವ ಸಿಬಿಐ ಅಧಿಕಾರಿಗಳ ಮನವಿಯನ್ನು ಪುರಸ್ಕರಿಸಿದ ನ್ಯಾಯಾಧೀಶೆ ವಿಜಯಲಕ್ಷ್ಮಿ ಗಾಣಾಪುರ, ಐದು ದಿನಗಳ ಕಾಲ ಆರೋಪಿಗಳನ್ನು ಸಿಬಿಐ ಅಧಿಕಾರಿಗಳ ವಶಕ್ಕೆ ನೀಡಿ ಆದೇಶ ಹೊರಡಿಸಿದರು.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಂದರ್ಭದಲ್ಲಿ ನ್ಯಾಯಾಲಯ ಆವರಣದಲ್ಲಿ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದರು. ನ್ಯಾಯಾಲಯ ಕೊಠಡಿ ಸಾರ್ವಜನಿಕರು ಮತ್ತು ವಕೀಲರಿಂದ ಕಿಕ್ಕಿರಿದು ತುಂಬಿತ್ತು.
2016ರ ಜೂನ್ 15ರಂದು ಧಾರವಾಡದ ಸಪ್ತಾಪುರದ ಜಿಮ್ನಲ್ಲಿ ಯೋಗೀಶಗೌಡ ಗೌಡರ ಅವರನ್ನು ಅಪರಿಚಿತರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸಿತ್ತು. ರಾಜ್ಯ ಸರ್ಕಾರ ಹೊರಡಿಸಿದ್ದ ಕ್ರಮಕ್ಕೆ ತಡೆ ನೀಡಿ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರಿಂ ಕೋರ್ಟ್ ತೆರವುಗೊಳಿಸುತ್ತಿದ್ದಂತೆ ಕಾರ್ಯಾಚರಣೆ ತೀವ್ರಗೊಳಿಸಿದ ಸಿಬಿಐ ಅಧಿಕಾರಿಗಳು ತಮಗೆ ದೊರೆತ ಮಾಹಿತಿ ಆಧಾರದಲ್ಲಿ ಬೆಂಗಳೂರಿನಲ್ಲಿ ಆರು ಜನ ಆರೋಪಿಗಳನ್ನು ವಶಕ್ಕೆ ಪಡೆದು, ಧಾರವಾಡ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.