ADVERTISEMENT

ಮುರುಘಾಶ್ರೀ ಬಂಧನಕ್ಕೆ ಆಗ್ರಹ: ಜಿಲ್ಲಾಧಿಕಾರಿ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2022, 11:33 IST
Last Updated 1 ಸೆಪ್ಟೆಂಬರ್ 2022, 11:33 IST
   

ಚಿತ್ರದುರ್ಗ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಬಂಧನಕ್ಕೆ ಆಗ್ರಹಿಸಿ ಭಾರತೀಯ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯರು, ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ ಪ್ರಯಾಣಿಸುತ್ತಿದ್ದ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಕಚೇರಿಯಿಂದ ಮಧ್ಯಾಹ್ನ ಊಟಕ್ಕೆ ತೆರಳುತ್ತಿದ್ದ ಜಿಲ್ಲಾಧಿಕಾರಿ, ಪ್ರತಿಭಟನಕಾರರ ಮನವಿ ಸ್ವೀಕರಿಸಲು ಮುಂದಾದರು. ಮಾಧ್ಯಮ ಪ್ರತಿನಿಧಿಗಳು ಪ್ರಕರಣದ ಬಗ್ಗೆ ಪ್ರಶ್ನಿಸುತ್ತಿದ್ದಂತೆ ಕಾರಲ್ಲಿ ಕುಳಿತು ಹೊರಡಲು ಅಣಿಯಾದರು. ಇದರಿಂದ ಕುಪಿತಗೊಂಡ ಪ್ರತಿಭಟನಕಾರರು ಜಿಲ್ಲಾಧಿಕಾರಿ ಕಾರು ತಡೆದು ಘೋಷಣೆ ಕೂಗಿದರು. ಪ್ರತಿಭಟನಕಾರರ ಆಕ್ರೋಶಕ್ಕೆ ಮಣಿದ ಜಿಲ್ಲಾಧಿಕಾರಿ ಮತ್ತೆ ಕಾರು ಇಳಿದು ಮನವಿ ಸ್ವೀಕರಿಸಿದರು.

‘ಸಂತ್ರಸ್ತ ಮಕ್ಕಳ ರಕ್ಷಣೆ ಮಾಡಲಾಗಿದ್ದು, ಜಿಲ್ಲಾಡಳಿತದಿಂದ ಯಾವುದೇ ವೈಫಲ್ಯವಾಗಿಲ್ಲ. ಪ್ರಕರಣದ ತನಿಖೆ ಕಾನೂನು ಚೌಕಟ್ಟಿನಲ್ಲಿ ಸಾಗುತ್ತಿದೆ. ಆರೋಪಿಗಳ ಬಂಧನದ ಬಗ್ಗೆ ಪೊಲೀಸ್ ಇಲಾಖೆಯನ್ನು ಪ್ರಶ್ನಿಸಿ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.