ADVERTISEMENT

ಮಕ್ಕಳ ರಕ್ಷಣೆ; ಕಲ್ಯಾಣ ಸಮಿತಿ ಅಧಿಕಾರಿ ವಿಚಾರಣೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2022, 20:50 IST
Last Updated 14 ನವೆಂಬರ್ 2022, 20:50 IST

ಮೈಸೂರು: ‘ಮಕ್ಕಳ ರಕ್ಷಣೆ ವಿಷಯದಲ್ಲಿ ಚಿತ್ರದುರ್ಗದ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮತ್ತು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕರ್ತವ್ಯಲೋಪ ಎಸಗಿದ್ದು, ಅವರ ವಿಚಾರಣೆ ನಡೆಸಿ, ಏಳು ದಿನದಲ್ಲಿ ವರದಿ ಸಲ್ಲಿಸಬೇಕು’ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಸಮಗ್ರ ಮಕ್ಕಳ ರಕ್ಷಣಾ ನಿರ್ದೇಶನಾಲಯಕ್ಕೆ ಸೂಚಿಸಿದೆ.

ಒಡನಾಡಿ ಸೇವಾ ಸಮಿತಿ ಯ ಸ್ಟ್ಯಾನ್ಲಿ ಕೆ.ವಿ . ಹಾಗೂ ಪರಶು ರಾಮ್‌ ಎಂ.ಎಲ್. ಬರೆದಿದ್ದ ಪತ್ರ ಆಧರಿಸಿ ಆಯೋಗವು ನ.11ರಂದು ನಿರ್ದೇಶನಾಲಯ ನಿರ್ದೇಶಕರಿಗೆ ಈ ಸೂಚನೆ ನೀಡಿದೆ. ಶಿವಮೂರ್ತಿ ಶರಣರಿಂದ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಸಂತ್ರಸ್ತೆಯರ ತಾಯಿಯ ಹೇಳಿಕೆ ಆಧರಿಸಿ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿದೆ’ ಎಂದು ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ತಿಳಿಸಿದ್ದಾರೆ.

‘ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ ಮರುಕಳಿಸದಂತೆ ನೋಡಿಕೊಳ್ಳಬೇಕು. ಸಮಗ್ರ ತನಿಖೆ ನಡೆಸಬೇಕು. ಘಟನೆಗೆ ಕಾರಣವಾದ ಅಧಿಕಾರಿ, ಸಿಬ್ಬಂದಿ ವಿಚಾರಣೆಗೆ ಒಳಪಡಿಸಬೇಕು’ ಎಂದೂ ಅಲ್ಲಿನ ಎಸ್ಪಿಗೆ ಆದೇಶಿಸಿದ್ದಾರೆ.

ADVERTISEMENT

ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ. ಬಸವರಾಜನ್ ಅವರಿಗೆ ನೆರವು ನೀಡಿದ ನಗರ ಠಾಣೆಯ ಪೊಲೀಸ್ ಕಾನ್‌ಸ್ಟೆಬಲ್ ರಂಗಸ್ವಾಮಿ ಅವರನ್ನು ಅಮಾನತು ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.