ಚಿತ್ರದುರ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿ ಕೋವಿಡ್–19ನಿಂದ ಬಳಲುತ್ತಿರುವ ಎಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಹರಸಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಖ್ಯಮಂತ್ರಿ ಹಾಗೂ ಅವರ ಕುಟುಂಬಕ್ಕೆ ಕೊರೊನಾ ಸೋಂಕು ಅಂಟಿಕೊಂಡಿದ್ದು ನೋವಿನ ಸಂಗತಿ. ಕೃಷಿ ಸಚಿವ ಬಿ.ಸಿ.ಪಾಟೀಲ ಸೇರಿ ಹಲವು ಜನಪ್ರತಿನಿಧಿಗಳಿಗೆ ಕೋವಿಡ್ ಬಂದಿದೆ. ಸೋಂಕಿನಿಂದ ಬಳಲುತ್ತಿರುವವರು ಬೇಗ ಗುಣಮುಖರಾಗಲು ಎಲ್ಲರೂ ಪ್ರಾರ್ಥಿಸೋಣ’ ಎಂದು ಕರೆ ನೀಡಿದರು.
‘ಆಗಸ್ಟ್ ತಿಂಗಳಲ್ಲಿ ಸೋಂಕು ಇನ್ನಷ್ಟು ಹೆಚ್ಚಾಗಲಿದೆ ಎಂಬುದನ್ನು ತಜ್ಞರು ಅಂದಾಜಿಸಿದ್ದಾರೆ. ಪರಿಸ್ಥಿತಿ ಇನ್ನಷ್ಟು ವಿಕೋಪಕ್ಕೆ ತಿರುಗುವ ಸಾಧ್ಯತೆ ಇದೆ. ಇಂತಹ ಸಂದರ್ಭದಲ್ಲಿ ಜನರು ಅಂತರ ಹಾಗೂ ಶಿಸ್ತು ಕಾಪಾಡುವ ಅಗತ್ಯವಿದೆ. ಮುನ್ನೆಚ್ಚರಿಕೆ ಇದ್ದರೆ ಮಾತ್ರ ಸೋಂಕು ನಿರ್ಮೂಲನೆ ಸಾಧ್ಯ’ ಎಂದು ಅಭಿಪ್ರಾಯಪಟ್ಟರು.
‘ಸೋಂಕಿಗೆ ಜಾತಿ ಹಾಗೂ ಧರ್ಮ ಭೇದವಿಲ್ಲ. ಅಧಿಕಾರ ಇರುವವರು, ಅಧಿಕಾರ ಇಲ್ಲದವರು ಸೇರಿ ಎಲ್ಲರಿಗೂ ಕೋವಿಡ್ ಬರುತ್ತದೆ. ಸೋಂಕು ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಕೋವಿಡ್ ಪ್ರಕರಣ ಕಡಿಮೆ ಇದ್ದಾಗ ಕಾಣುತ್ತಿದ್ದ ಶಿಸ್ತು ಈಗ ಮಾಯವಾಗಿದೆ. ಇದರಿಂದ ಇಡೀ ಸಮಾಜಕ್ಕೆ ಗಂಡಾಂತರ ಬಂದಿದೆ’ ಎಂದು ಬೇಸರ ವ್ಯಕ್ತಪಡಿಸಿದರು.
‘ಕೋವಿಡ್ ಹೆಚ್ಚುತ್ತಿರುವ ಕಾರಣ ಮುರುಘಾ ವನವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಮುಂದಿನ ಪರಿಸ್ಥಿತಿ ಅವಲೋಕಿಸಿ ಶರಣ ಸಂಸ್ಕೃತಿ ಉತ್ಸವದ ಪೂರ್ವಭಾವಿ ಸಭೆ ಬಗ್ಗೆ ನಿರ್ಧರಿಸಲಾಗುವುದು. ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ವೈದ್ಯರು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಸೇವೆ ಒದಗಿಸುತ್ತಿದ್ದಾರೆ. ಜನರ ಆರೋಗ್ಯ ಕಾಪಾಡಲು ಮಠ ಬದ್ಧವಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.