ಮದ್ದೂರು: ‘ಬಿಜೆಪಿ ಶಾಸಕ ಶ್ರೀರಾಮುಲು ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ. ಪ್ರತಿಕ್ರಿಯೆ ನೀಡದಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ, ಬಾಯಿಗೆ ಪ್ಲಾಸ್ಟರ್ ಹಾಕಿಕೊಂಡಿದ್ದೇನೆ’ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸೋಮವಾರ ವ್ಯಂಗ್ಯವಾಡಿದರು.
ಸುದ್ದಿಗಾರರ ಜೊತೆ ಮಾತನಾಡಿ, ‘ಶ್ರೀರಾಮುಲು ಅಣ್ಣನವರ ಟ್ವೀಟ್ ವಿಚಾರದ ಬಗ್ಗೆ ಮುಂದೊಂದು ದಿನ ಉತ್ತರ ಕೊಡುತ್ತೇನೆ. ಈಗ ಕಾಂಗ್ರೆಸ್ ಪಕ್ಷ ನನ್ನ ಬಾಯಿಗೆ ಬೀಗ ಹಾಕಿದೆ. ಪಕ್ಷದ ಸೂಚನೆ ಪಾಲಿಸುತ್ತೇನೆ. ಸಮ್ಮಿಶ್ರ ಸರ್ಕಾರದಲ್ಲಿ ನಾನೊಬ್ಬ ಮಂತ್ರಿ. ಮಂತ್ರಿ ಕೆಲಸ ಮಾಡುತ್ತಿದ್ದೇನೆ’ ಎಂದರು.
‘ಐಎಂಎ ಮುಖ್ಯಸ್ಥ ಮೊಹಮ್ಮದ್ ಮನ್ಸೂರ್ ಖಾನ್ ನನಗೆ ಗೊತ್ತಿಲ್ಲ. ಆತನ ಮಗ ನನ್ನ ಸ್ನೇಹಿತ. ಇನ್ನುಳಿದ ವಿಚಾರಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ’ ಎಂದರು.
ಕಾರು ತಡೆದ ರೈತರು: ನಾಲೆಗಳಿಗೆ ಕೆಆರ್ಎಸ್ ಜಲಾಶಯದಿಂದ ನೀರು ಹರಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿ, ಗೆಜ್ಜಲಗೆರೆ ಬಳಿ ಸಚಿವ ಶಿವಕುಮಾರ್ ಅವರ ಕಾರು ತಡೆದರು. ನಾಲೆಗಳಿಗೆ ಕೂಡಲೇ ನೀರು ಹರಿಸಬೇಕು ಎಂದು ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.