ADVERTISEMENT

ಅಂಬಲಿ ಹಳಸಿತು, ಕಂಬಳಿ ಬೀಸಿತಲೇ ಪರಾಕ್: ಕಾರಣಿಕ ಭವಿಷ್ಯ

ಮೈಲಾರಲಿಂಗೇಶ್ವರ ಕಾರಣಿಕ ಮಹೋತ್ಸವ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2023, 15:27 IST
Last Updated 7 ಫೆಬ್ರುವರಿ 2023, 15:27 IST
ಪ್ರಜಾವಾಣಿ ಚಿತ್ರ: ಲವ
ಪ್ರಜಾವಾಣಿ ಚಿತ್ರ: ಲವ   

ಮೈಲಾರ (ವಿಜಯನಗರ ಜಿಲ್ಲೆ) : ‘ಅಂಬಲಿ ಹಳಸಿತು, ಕಂಬಳಿ ಬೀಸಿತಲೇ ಪರಾಕ್’. ಇದು ಈ ವರ್ಷದ ಮೈಲಾರಲಿಂಗೇಶ್ವರ ಸ್ವಾಮಿಯ ಕಾರಣಿಕ ನುಡಿ.

ಹೂವಿನಹಡಗಲಿ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಸುಕ್ಷೇತ್ರ ಮೈಲಾರದಲ್ಲಿ ಮಂಗಳವಾರ ಸಂಜೆ ಲಕ್ಷಾಂತರ ಭಕ್ತರ ನಡುವೆ ಕಾರಣಿಕ ಮಹೋತ್ಸವ ಜರುಗಿತು. ದೇವಸ್ಥಾನದ ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್ ಅವರು ಅಶ್ವಾರೂಢರಾಗಿ ಡೆಂಕನಮರಡಿಗೆ ಆಗಮಿಸಿ ಕಾರಣಿಕ ಸ್ಥಳದಲ್ಲಿ ಪ್ರದಕ್ಷಿಣೆ ಹಾಕಿದರು. ಈ ಹಿಂದೆ ವಿಜಯನಗರದ ಅರಸರು ಮೈಲಾರಲಿಂಗ ಸ್ವಾಮಿಗೆ ಅರ್ಪಿಸಿದ್ದ ಮೂರ್ತಿಗಳ ಉತ್ಸವದೊಂದಿಗೆ ಗೊರವಯ್ಯ ರಾಮಣ್ಣ ಅವರನ್ನು ಸಿಂಹಾಸನ ಕಟ್ಟೆಯಿಂದ ಕಾರಣಿಕ ಸ್ಥಳಕ್ಕೆ ಗೊರವ ಸಮೂಹ ಭವ್ಯ ಮೆರವಣಿಗೆಯಲ್ಲಿ ಕರೆತಂದಿತು. ಈ ವೇಳೆ 'ಏಳು ಕೋಟಿ.. ಏಳು ಕೋಟಿಗೂ.... ಚಹಾಂಗ ಬಲೋ' ಎಂಬ ಸ್ವಾಮಿಯ ಉದ್ಘೋಷ ಮುಗಿಲು ಮುಟ್ಟಿತು.

ಸುಕ್ಷೇತ್ರದ ಧಾರ್ಮಿಕ ಪರಂಪರೆಯಂತೆ ಧರ್ಮಕರ್ತರಿಂದ ಭಂಡಾರದ ಆಶೀರ್ವಾದ ಪಡೆದ ಗೊರವಯ್ಯ ರಾಮಣ್ಣ ಬಿಲ್ಲು ಏರಿ ಮೇಲಿನಂತೆ ಕಾರಣಿಕ ನುಡಿದರು. ಈ ವರ್ಷದ ಕಾರಣಿಕ ನುಡಿಯನ್ನು ಭಕ್ತರು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದರು.

ADVERTISEMENT

‘ಸ್ವಾಮಿಯ ನುಡಿಯಲ್ಲಿ ಮಿಶ್ರಫಲ ಅಡಗಿದೆ. ಮಳೆ, ಬೆಳೆ ಸಮೃದ್ದಿಯಾಗಿ ನಾಡು ಸುಭಿಕ್ಷೆಯಾಗಬಹುದು. ಮಳೆ ಹೆಚ್ಚಾಗಿ ಬೆಳೆಹಾನಿ ಸಂಭವಿಸುವ ಸಾಧ್ಯತೆಯೂ ಇದೆ. ಮುಂದಿನ ಚುನಾವಣೆಯಲ್ಲಿ ಒಂದೇ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರ ಹಿಡಿಯುವ ಸೂಚನೆ ಇದೆ’ ಎಂದು ಹಿರಿಯರು ಕೃಷಿ, ರಾಜಕೀಯ, ವಾಣಿಜ್ಯ, ಸಾಮಾಜಿಕ ಕ್ಷೇತ್ರಗಳ ಮೇಲೆ ತಾಳೆ ಹಾಕಿ ವಿಶ್ಲೇಷಿಸುತ್ತಿದ್ದರು. ಸ್ವಾಮಿಯ ಉಕ್ತಿ ಶುಭದಾಯಕವಾಗಿದೆ ಎಂದು ಕೆಲವರು ಅರ್ಥೈಸಿದರು.

ಕಾಗಿನೆಲೆ ಕನಕ ಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಶಾಸಕ ಪಿ.ಟಿ.ಪರಮೇಶ್ವರನಾಯ್ಕ, ಸಂಸದ ವೈ.ದೇವೇಂದ್ರಪ್ಪ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.