ADVERTISEMENT

ಮೈಸೂರು– ಕುಶಾಲನಗರ ರೈಲು ಮಾರ್ಗ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2019, 20:15 IST
Last Updated 27 ಫೆಬ್ರುವರಿ 2019, 20:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮೈಸೂರು: ಸಾಕಷ್ಟು ವಿರೋಧಕ್ಕೆ ಕಾರಣವಾಗಿದ್ದ ಮೈಸೂರು (ಬೆಳಗೊಳ)– ಕುಶಾಲನಗರ ನೂತನ ರೈಲು ಮಾರ್ಗದ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಬುಧವಾರ ಒಪ್ಪಿಗೆ ನೀಡಿದೆ.

ಸುಮಾರು 87 ಕಿ.ಮೀ ಉದ್ದದ ಈ ಮಾರ್ಗದ ಕಾಮಗಾರಿಯನ್ನು ₹ 1,860 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ಅನುಮತಿ ಲಭಿಸಿದೆ.

ಈ ನೂತನ ಮಾರ್ಗ ನಿರ್ಮಾಣವಾದರೆ ಕೊಡಗು ಜಿಲ್ಲೆಗೆ ರೈಲ್ವೆ ಸಂಪರ್ಕ ಲಭಿಸಿದಂತಾಗಲಿದೆ. ಇದರಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ಬೈಲುಕುಪ್ಪೆ ಹಾಗೂ ಕುಶಾಲನಗರದ ಜನರಿಗೆ ಹೆಚ್ಚಿನ ಪ್ರಯೋಜನವಾಗಲಿದೆ. ಜೊತೆಗೆ ಈ ಭಾಗದ ಪ್ರವಾಸೋದ್ಯಮ ಹಾಗೂ ಆರ್ಥಿಕ ಅಭಿವೃದ್ಧಿಗೂ ನೆರವಾಗಲಿದೆ ಎಂದು ಅಂದಾಜಿಸಲಾಗಿದೆ. ಪ್ರತಿ ವರ್ಷ ಲಕ್ಷಾಂತರ ಸಂಖ್ಯೆಯಲ್ಲಿ ಪ್ರವಾಸಿಗರು ವಿವಿಧೆಡೆಯಿಂದ ಕೊಡಗು ಜಿಲ್ಲೆಗೆ ಬರುತ್ತಾರೆ.

ADVERTISEMENT

ಮೈಸೂರು ರೈಲ್ವೆ ಬಳಕೆದಾರರ ಸಂಘವು ರೈಲ್ವೆ ಸಚಿವ ಪೀಯೂಷ್ ಗೋಯಲ್‌ ಹಾಗೂ ಸಂಸದ ಪ್ರತಾಪಸಿಂಹ ಅವರನ್ನು ಅಭಿನಂದಿಸಿದೆ.

‘ಹಲವು ವರ್ಷಗಳಿಂದ ಈ ಯೋಜನೆ ನನೆಗುದಿಗೆ ಬಿದ್ದಿತ್ತು. ಕೇಂದ್ರ ಹಾಗೂ ರಾಜ್ಯ ಸಹಭಾಗಿತ್ವದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗುವುದು’ ಎಂದು ಪ್ರತಾಪಸಿಂಹ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ಕೊಡಗಿನಲ್ಲಿ ರೈಲು ಮಾರ್ಗ ನಿರ್ಮಿಸುವುದರಿಂದ ಪರಿಸರಕ್ಕೆ ಧಕ್ಕೆ ಉಂಟಾಗಲಿದೆ ಎಂದು ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿದ್ದರಿಂದ ವಿಳಂಬವಾಗಿತ್ತು. ಮೈಸೂರಿನಿಂದ ಕುಶಾಲನಗರದವರೆಗೆ ರೈಲು ಸಂಪರ್ಕ ಕಲ್ಪಿಸಲು ಈ ಹಿಂದೆಯೇ ಸಮೀಕ್ಷೆ ನಡೆಸಲಾಗಿತ್ತು. ಈ ಮಾರ್ಗವು ಲಾಭದಾಯಕವಲ್ಲ ಎಂದು ರೈಲ್ವೆ ಅಧಿಕಾರಿಗಳು ಯೋಜನೆಯನ್ನು ಕೈಬಿಟ್ಟಿದ್ದರು. ಈಗ ಒಪ್ಪಿಗೆ ಸಿಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.