ಮೈಸೂರು: ‘ಮೈಸೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಪಕ್ಷವೇ ಹೆಚ್ಚು ಸ್ಥಾನ ಗೆದ್ದಿದೆ. ಹೀಗಾಗಿ, ಮೇಯರ್ ಸ್ಥಾನ ನಮಗೇ ಬೇಕು’ ಎಂದು ಕಾಂಗ್ರೆಸ್– ಜೆಡಿಎಸ್ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಇಲ್ಲಿ ಬುಧವಾರ ತಿಳಿಸಿದರು.
ಬಹಳ ವರ್ಷಗಳಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಪರಸ್ಪರ ಎದುರಾಳಿಯಾಗಿ ಹೋರಾಟ ಮಾಡಿಕೊಂಡು ಬಂದಿರುವುದರಿಂದ ಚುನಾವಣೆಗಳಲ್ಲಿ ಜೊತೆಗೂಡಿ ಕೆಲಸ ಮಾಡಲು ಇರಿಸು–ಮುರಿಸು ಉಂಟಾಗುವುದು ಸಹಜ ಎಂದರು.
‘ನಮ್ಮ ಎದುರಾಳಿ ಬಿಜೆಪಿ ಆಗಿರುವುದರಿಂದ ಒಟ್ಟಾಗಿ ಕೆಲಸ ಮಾಡಲೇಬೇಕಿದೆ. ಮಂಡ್ಯದ ಕಾಂಗ್ರೆಸ್ ನಾಯಕರು ವಿದೇಶದಿಂದ ವಾಪಸಾಗಿದ್ದಾರೆ. ಪ್ರಚಾರದಲ್ಲಿ ಭಾಗವಹಿಸುತ್ತಾರೆ’ ಎಂದು ಹೇಳಿದರು.
‘ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನದಲ್ಲಿ ಬಿಜೆಪಿ ಮುಖಂಡರೇ ಈಗ ಅಸ್ಥಿರವಾಗಿದ್ದಾರೆ. ಉಪಚುನಾವಣೆ ನಡೆಯುತ್ತಿರುವ 5 ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳು ಜಯಭೇರಿ ಮೊಳಗಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.