ದಾವಣಗೆರೆ: ನ್ಯಾಕ್ ಪರಿಶೀಲನಾ ಸಮಿತಿಯ ಲಂಚ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೆ ಒಳಗಾಗಿರುವ ದಾವಣಗೆರೆ ವಿಶ್ವವಿದ್ಯಾಲಯದ ಮೈಕ್ರೊ ಬಯಾಲಜಿ ವಿಭಾಗದ ಪ್ರೊ.ಗಾಯತ್ರಿ ದೇವರಾಜ ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.
ಗುರುವಾರ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ವಿಶೇಷ ಸಿಂಡಿಕೇಟ್ ಸಭೆಯಲ್ಲಿ ಈ ಕುರಿತು ಚರ್ಚಿಸಿ, ಗಾಯತ್ರಿ ಅವರನ್ನು 6 ತಿಂಗಳ ಅವಧಿಗೆ ಅಮಾನತು ಮಾಡಿ ನಿರ್ಣಯ ಕೈಗೊಳ್ಳಲಾಗಿದೆ.
‘ಕೆಸಿಎಸ್ಆರ್ ನಿಯಮಗಳ ಪ್ರಕಾರ ಪ್ರೊ. ಗಾಯತ್ರಿ ದೇವರಾಜ ಅವರನ್ನು ಅಮಾನತುಗೊಳಿಸಲಾಗಿದೆ. ಆದೇಶದ ಪ್ರತಿಯನ್ನು ರಾಜ್ಯಪಾಲರು ಹಾಗೂ ಸರ್ಕಾರಕ್ಕೆ ಕಳಿಸಿಕೊಡಲಾಗುವುದು’ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಡಿ. ಕುಂಬಾರ ತಿಳಿಸಿದರು.
ನ್ಯಾಕ್ ತಪಾಸಣಾ ಸಮಿತಿಯ ಸದಸ್ಯರೂ ಆಗಿರುವ ಗಾಯತ್ರಿ ಅವರನ್ನು ಲಂಚ ಪಡೆದ ಆರೋಪದಲ್ಲಿ ಸಿಬಿಐ ಅಧಿಕಾರಿಗಳು ಈಚೆಗೆ ವಿಚಾರಣೆಗೆ ಒಳಪಡಿಸಿ ಬಂಧಿಸಿದ್ದರು. ವಿಶ್ವವಿದ್ಯಾಲಯದ ಕುಲಸಚಿವೆಯಾಗಿಯೂ ಕಾರ್ಯ ನಿರ್ವಹಿಸಿದ್ದ ಅವರ ನಿವಾಸಕ್ಕೂ ಭೇಟಿ ನೀಡಿ ಪರಿಶೀಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.