
ಬೆಂಗಳೂರು: ಮೆಟ್ರೊ ಪ್ರಯಾಣ ದರ ಏರಿಕೆಗೆ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ತಡೆ ನೀಡಿದೆ ಎಂದು ಹೇಳಿಕೆ ನೀಡಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ಕಿಡಿಕಾರಿದೆ.
ಮೊದಲನೆಯದಾಗಿ, ನಮ್ಮ ಮೆಟ್ರೊ ದರ ಏರಿಕೆಯಲ್ಲಿ ಕೇಂದ್ರದ ಪಾತ್ರವಿಲ್ಲ ಎಂದು ಅವರೇ (ತೇಜಸ್ವಿ ಸೂರ್ಯ) ಹೇಳಿದ್ದರು. ಆದರೆ ಈಗ, ದೆಹಲಿಗೆ ಓಡಿಹೋಗಿ ದರ ಏರಿಕೆಗೆ ತಾತ್ಕಾಲಿಕವಾಗಿ ತಡೆ ನೀಡಿ ಎಂದು ಕೇಳುತ್ತಿದ್ದಾರೆ. ನಿಮಗೆ ದರ ನಿಗದಿ ಮಾಡುವ, ಪರಿಷ್ಕರಿಸುವ ಅಧಿಕಾರ ಇಲ್ಲವೆಂದ ಮೇಲೆ, ಅದಕ್ಕೆ(ದರ ಏರಿಕೆ) ತಡೆ ನೀಡಲು ನಿಮಗೆ ಹೇಗೆ ಅಧಿಕಾರವಿದೆ ಎಂದು ರಾಜ್ಯ ಕಾಂಗ್ರೆಸ್ ಘಟಕ ಎಕ್ಸ್ನಲ್ಲಿ ಪ್ರಶ್ನಿಸಿದೆ.
ಸಾರ್ವಜನಿಕರ ಆಕ್ರೋಶ ಹೆಚ್ಚಾದಾಗ ನೀವು ಜವಾಬ್ದಾರಿಯಿಂದ ಕೈ ತೊಳೆದುಕೊಂಡು ಪ್ರಭಾವ ಬೀರಲು ಸಾಧ್ಯವಿಲ್ಲ ಎಂದೂ ಕುಟುಕಿದೆ.
‘ಮೆಟ್ರೊ ಪ್ರಯಾಣ ದರ ಏರಿಕೆಗೆ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ತಡೆ ನೀಡಿದೆ. ಸೋಮವಾರದಿಂದ ದರ ಏರಿಕೆ ಇರುವುದಿಲ್ಲ. ಕೇಂದ್ರ ನಗರ ವ್ಯವಹಾರಗಳ ಸಚಿವ ಮನೋಹರ ಲಾಲ್ ಖಟ್ಟರ್ ಅವರು ಈ ಸೂಚನೆ ನೀಡಿದ್ದಾರೆ’ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದರು.
ಸುದ್ದಿಗಾರರ ಜತೆ ಮಾತನಾಡಿದ್ದ ಅವರು, ‘ಪ್ರಯಾಣ ದರ ಏರಿಸುವ ನಿರ್ಧಾರದ ವಿರುದ್ಧ ತಕ್ಷಣ ಮಧ್ಯ ಪ್ರವೇಶಿಸುವಂತೆ ಸಚಿವರನ್ನು ಕೇಳಿಕೊಂಡಿದ್ದೆ. ಒಂದು ವಾರದಿಂದ ಈ ಬಗ್ಗೆ ಸಚಿವರೊಂದಿಗೆ ಚರ್ಚಿಸಿದ್ದೆ. ಇದಕ್ಕೆ ಸ್ಪಂದಿಸಿರುವ ಸಚಿವರು, ದರ ಏರಿಕೆ ಜಾರಿ ಮಾಡದೇ ಇರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೇ ಸೋಮವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದಿದ್ದಾರೆ’ ಎಂದೂ ತಿಳಿಸಿದ್ದರು.
‘ಅರ್ಧ ಯುದ್ಧವಷ್ಟೇ ಮುಗಿದಿದೆ. ಮೆಟ್ರೊಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಒಪ್ಪಂದದ ಪ್ರಕಾರ ದರ ನಿಗದಿ ಮಾಡುವ, ಕಾಲಕಾಲಕ್ಕೆ ಪರಿಷ್ಕರಿಸುವ ಅಧಿಕಾರ ಇರುವುದು ರಾಜ್ಯ ಸರ್ಕಾರಕ್ಕೆ. ಹಾಗಾಗಿ ದರ ಏರಿಕೆ ಮಾಡುವುದು ಕೇಂದ್ರ ಸರ್ಕಾರ ಎಂದು ಸುಳ್ಳು ಹೇಳುವುದನ್ನು ರಾಜ್ಯ ಸರ್ಕಾರವು ನಿಲ್ಲಿಸಬೇಕು’ ಎಂದೂ ಅವರು ಆಗ್ರಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.